ಬೆಂಗಳೂರು: ‘ರಾಷ್ಟ್ರೀಯತೆ ಹೆಸರಿನಲ್ಲಿ ದೇಶದ ಸಾಂಸ್ಕೃತಿಕ ಚಹರೆಯನ್ನು ಬದಲಾಯಿಸಲು ಎಲ್ಲಾ ರೀತಿಯ ಹುನ್ನಾರ ನಡೆಸಲಾಗುತ್ತಿದೆ’ ಎಂದು ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಮಾನವ ಬಂಧುತ್ವ ವೇದಿಕೆ ಆಶ್ರಯದಲ್ಲಿ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಮಕಾಲೀನ ಭಾರತ’ ಕುರಿತ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು.
ವಕೀಲ ಸಿ.ಎಸ್. ದ್ವಾರಕಾನಾಥ್, ‘ನ್ಯಾಯಾಂಗ ವ್ಯವಸ್ಥೆಯಲ್ಲೂ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗಿದೆ. ಸಂವಿಧಾನದ ಮೂಲ ಆಶಯದ ಮೇಲೆ ದಾಳಿ ನಡೆಯುತ್ತಿದೆ’ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ಮಟ್ಟು, ‘ರಾಷ್ಟ್ರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣಕ್ಕೆ ದೀರ್ಘ ಇತಿಹಾಸವಿದೆ. 1992ರಿಂದ ಇಲ್ಲಿಯವರೆಗೆ ದೇಶದಲ್ಲಿ 40ಕ್ಕೂ ಹೆಚ್ಚು ಪತ್ರಕರ್ತರ ಹತ್ಯೆಗಳಾಗಿವೆ’ ಎಂದು ಆತಂಕ ವ್ಯಕ್ತಪಡಿಸಿದರು.
‘ಪತ್ರಿಕೋದ್ಯಮ ವೃತ್ತಿಯಾಗಿ ಉಳಿದಿಲ್ಲ. ಬೃಹತ್ ಉದ್ಯಮವಾಗಿ ರೂಪುಗೊಂಡಿದೆ. ರಿಲಯನ್ಸ್ನಂತಹ ಉದ್ದಿಮೆದಾರರು ಅದನ್ನು ಲಾಭಕ್ಕಾಗಿ ಬಳಸಿಕೊಳ್ಳುವ ಆತಂಕ ಎದುರಾಗಿದೆ’ ಎಂದರು.
ಪ್ರೊ. ಮಹೇಶ್ಚಂದ್ರ ಗುರು, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ, ಬೆಂಗಳೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಎಚ್.ಎನ್.ರಮೇಶ್, ಕುಲಸಚಿವರಾದ ಡಾ. ಬಿ.ಕೆ.ರವಿ, ಡಾ.ಸಿ.ಶಿವರಾಜು ಮತ್ತು ಮಾನವ ಬಂಧುತ್ವ ವೇದಿಕೆ ಸಂಚಾಲಕ ಎನ್. ಅನಂತನಾಯಕ್ ಮಾತನಾಡಿದರು.