ಬೀದರ್: ‘ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕದಂತೆ ಜಿಲ್ಲಾ ಆಡಳಿತಕ್ಕೆ ಸೂಚನೆ ನೀಡಿದ್ದೇನೆ’ ಎಂದು ಸಂಸದ ಭಗವಂತ ಖೂಬಾ ತಿಳಿಸಿದರು.
‘ಕಳೆದ ವರ್ಷ ಜಿಲ್ಲಾಧಿಕಾರಿಯಾಗಿದ್ದ ಅನುರಾಗ ತಿವಾರಿ ಅವರಿಗೆ ದೂರವಾಣಿ ಕರೆ ಮಾಡಿ ನನ್ನ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಸೇರಿಸದಂತೆ ಮನವಿ ಮಾಡಿದ್ದೆ. ಹೀಗಾಗಿ ಕಳೆದ ವರ್ಷವೂ ನನ್ನ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಇರಲಿಲ್ಲ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಶಾಸಕ ಆರ್.ಅಶೋಕ ಅವರು ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಟಿಪ್ಪು ವೇಷಧಾರಿಗಳಾಗಿ ಕಾಣಿಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದಕ್ಕೆ ಪ್ರತಿಕ್ರಿಯೆ ನೀಡಲು ಖೂಬಾ ನಿರಾಕರಿಸಿದರು.
ಖರ್ಗೆ ಹೇಳಿಕೆಗೆ ಖಂಡನೆ: ‘45 ವರ್ಷಗಳಿಂದ ರಾಜಕೀಯದಲ್ಲಿರುವ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಬೀದರ್– ಕಲಬುರ್ಗಿ ರೈಲು ಮಾರ್ಗದ ಕಾಮಗಾರಿ ನಮ್ಮದು, ಬಿಜೆಪಿಯವರು ಉದ್ಘಾಟನೆ ಮಾಡುತ್ತಿದ್ದಾರೆಂದು ಹೇಳಿಕೆ ನೀಡಿರುವುದು ಖಂಡನೀಯ’ ಎಂದರು.
‘ಇದು ಕಲಬುರ್ಗಿ– ಬೀದರ್ ಅಲ್ಲ, ಬೀದರ್–ಕಲಬುರ್ಗಿ ರೈಲು ಮಾರ್ಗ. ಕಡತಗಳಲ್ಲೂ ಸ್ಪಷ್ಟ ಉಲ್ಲೇಖ ಇದೆ. 1998–1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದ ಅವಧಿಯಲ್ಲಿ ಬೀದರ್–ಕಲಬುರ್ಗಿ ರೈಲು ಮಾರ್ಗದ ಯೋಜನೆಗೆ ಅನುಮೋದನೆ ನೀಡಲಾಗಿತ್ತು. 2000ರಲ್ಲಿ ಯೋಜನೆಗೆ ₹ 20 ಕೋಟಿ ಮೀಸಲಿಟ್ಟು ಶಂಕುಸ್ಥಾಪನೆ ನೆರವೇರಿಸಲಾಗಿತ್ತು’ ಎಂದು ತಿಳಿಸಿದರು.