ಜಗಳೂರು: ಮಹತ್ವದ ರಕ್ಷಣಾ ಖಾತೆ ಸೇರಿದಂತೆ ಏಳು ಖಾತೆಗಳನ್ನು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಜಯಲಕ್ಷ್ಮೀ ಮಹೇಶ್ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಮಹಿಳಾ ಮೋರ್ಚಾ ಆಯೋಜಿಸಿದ್ದ ‘ನಾರಿ ಶಕ್ತಿ ರಾಷ್ಟ್ರ ಶಕ್ತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಶತಮಾನಗಳಿಂದ ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸುವ ಮೂಲಕ ಶೋಷಣೆ ಮಾಡಲಾಗಿದೆ.
ಉಳಿದ ರಾಷ್ಟ್ರೀಯ ಪಕ್ಷಗಳು ಮಹಿಳೆಯರನ್ನು ಕಡೆಗಣಿಸುತ್ತಿವೆ. ಬಿಜೆಪಿಯಲ್ಲಿ ಮಹಿಳೆಯರಿಗೆ ಮಹತ್ವದ ಖಾತೆ ಮತ್ತು ಸ್ಥಾನಮಾನಗಳನ್ನು ನೀಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ’ ಎಂದರು.
ಮುಖಂಡರಾದ ಇಂದಿರಾ ರಾಮಚಂದ್ರ ಮಾತನಾಡಿ, ‘ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬ ಅರ್ಥದಲ್ಲಿ ಮಾತನಾಡಿರುವುದು ಖಂಡನೀಯ’ ಎಂದು ಹೇಳಿದರು.
ತಾಲ್ಲೂಕು ಘಟಕದ ಅಧ್ಯಕ್ಷೆ ಪದ್ಮಾ ಆನಂದಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯೆ ಎಸ್.ಕೆ.ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಡಿ.ವಿ.ನಾಗಪ್ಪ, ಸೊಕ್ಕೆ
ಸಿದ್ದಪ್ಪ, ಶಿವಕುಮಾರಸ್ವಾಮಿ, ಸೋಮನಹಳ್ಳಿ ಶ್ರೀನಿವಾಸ್, ಎಸ್.ಟಿ.ಮೋರ್ಚಾ ಅಧ್ಯಕ್ಷ ನಿಜಲಿಂಗಪ್ಪ, ಓಬಳೇಶ್, ಕೃಷ್ಣಮೂರ್ತಿ ಇದ್ದರು.