ಚೆನ್ನೈ: ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ ಮಳೆಯಿಂದ ಈವರೆಗೆ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಸಾವಿರಾರು ಮಂದಿ ನೆಲೆ ಕಳೆದುಕೊಂಡಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪೂರ್ವ ಕರಾವಳಿ ಜಿಲ್ಲೆಗಳಾದ ವಿಲ್ಲುಪುರಂ, ತಿರುವಳ್ಳೂರು, ತಿರುವರೂರುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 31ರಿಂದ ಸುರಿಯುತ್ತಿರುವ ಮಳೆಯಿಂದ ಚೆನ್ನೈ ಮತ್ತೆ ಮುಳುಗಿದೆ. ಐದು ದಿನಗಳಿಂದ ಶಾಲಾ ಕಾಲೇಜುಗಳು ಮುಚ್ಚಿವೆ. ಮಳೆಯ ಕಾರಣದಿಂದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿವೆ. ಚೆನ್ನೈನ ಹಲವು ಪ್ರದೇಶಗಳು ಜಲಾವೃತವಾಗಿವೆ. ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.
ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಕರೆತರಲಾಗಿದೆ. ಆಶ್ರಯ ಕಳೆದುಕೊಂಡಿರುವವರಿಗೆ ಪುನರ್ವಸತಿ ಕೇಂದ್ರಗಳಲ್ಲಿ ತಾತ್ಕಾಲಿಕ ನೆಲೆ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.