ಮಂಗಳೂರು: ಟಿಪ್ಪು ಸುಲ್ತಾನ್ ಜಯಂತಿ ಹಾಗೂ ಬಿಜೆಪಿಯ ಪರಿವರ್ತನಾ ಯಾತ್ರೆ ಸಮಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ 127 ಕೋಮು ಗೂಂಡಾಗಳಿಂದ ಭದ್ರತಾ ಬಾಂಡ್ ಪಡೆಯಲಾಗಿದೆ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ತಿಳಿಸಿದರು.
ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬುಧವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಡಿದರು.
ಜಿಲ್ಲೆಯಲ್ಲಿ ಭದ್ರತಾ ಕಾರ್ಯಕ್ಕೆ 2,000 ಪೊಲೀಸರು, ರಾಜ್ಯ ಮೀಸಲು ಪೊಲೀಸ್ ಪಡೆಯ 13 ತುಕಡಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಯ ಒಂದು ಕಂಪನಿ ನಿಯೋಜಿಸಲಾಗಿದೆ ಎಂದರು.
ಬಿಜೆಪಿಯ ಪರಿವರ್ತನಾ ಸಮಾವೇಶಗಳಿಗೆ ಅನುಮತಿ ಕೋರಿರುವ ಅರ್ಜಿಗಳ ಪರಿಶೀಲನೆ ನಡೆದಿದೆ. ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಕುರಿತು ಪರಿಸ್ಥಿತಿ ಆಧರಿಸಿ ಸ್ಥಳೀಯ ಅಧಿಕಾರಿಗಳು ತೀರ್ಮಾನಿಸುತ್ತಾರೆ ಎಂದು ಅವರು ಹೇಳಿದರು.