ಬಳ್ಳಾರಿ: ‘ಮಹಿಳೆಯರು ಸ್ವಾಲಂಬನೆ ಬದುಕು ಕಟ್ಟಿಕೊಳ್ಳಲು ಮುಂದೆ ಬರಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಟೈಲರಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ತರಬೇತಿ ಸಂಸ್ಥೆಯ ಅಧ್ಯಕ್ಷ ವೆಂಕಟರಮಣಪ್ಪ ಮಾತನಾಡಿ, ‘ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ನಿರುದ್ಯೋಗ ಹೋಗಲಾಡಿಸಲು ಯುವತಿಯರಿಗೆ ತರಬೇತಿ ನೀಡಲಾಗುವುದು’ ಎಂದರು.
ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಗಂಗಾಧರಪ್ಪ ಮಾತನಾಡಿ, ‘ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಸ್ವ ಉದ್ಯೋಗಕ್ಕಾಗಿ ₹ 1 ಲಕ್ಷ ಸಾಲ ನೀಡಲಾಗುವುದು. ಆಸಕ್ತರು ಪ್ರಯೋಜನ ಪಡೆದುಕೊಳ್ಳಬಹುದು’ ಎಂದು ಹೇಳಿದರು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ದೀನಾ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಾನಕಿ ರಾಮ್ , ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸೌಭಾಗ್ಯ, ಯೋಜನಾ ನಿರ್ದೇಶಕರಾದ ಚಂದ್ರಶೇಖರ್ ಗುಡಿ, ಸಹಾಯಕ ಯೋಜನಾಧಿಕಾರಿ ಪ್ರಕಾಶ್, ವೆಂಕಟಯ್ಯ ಅಪ್ಪಗೆರೆ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯಿತಿ, ಸೌಂದರ್ಯ ಗ್ರಾಮೀಣ ಹಾಗೂ ಪಟ್ಟಣ ಅಭಿವೃದ್ಧಿ ಸಂಸ್ಥೆಯ ಜಂಟಿಯಾಗಿ ರಾಜೀವ ಗಾಂಧಿ ಚೈತನ್ಯ ಯೋಜನೆಯಡಿ ತಾಲ್ಲೂಕಿನ 73 ಗ್ರಾಮೀಣ ಮಹಿಳಾ ಅಭ್ಯರ್ಥಿಗಳಿಗೆ 45 ದಿನ ಟೈಲರಿಂಗ್ ತರಬೇತಿ ನೀಡಲಾಗಿತ್ತು.