ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ಕೊರತೆಯಿಂದ ಭಾಷಾನೀತಿ ವಿಚಾರ ತಪ್ಪಾಗಿ ಪ್ರಸ್ತಾಪ: ತನ್ವೀರ್ ಸೇಠ್

Last Updated 25 ನವೆಂಬರ್ 2017, 9:20 IST
ಅಕ್ಷರ ಗಾತ್ರ

ಮೈಸೂರು: 'ಮಾಹಿತಿ ಕೊರತೆಯಿಂದಾಗಿ ಶುಕ್ರವಾರ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಭಾಷಾನೀತಿಗೆ ಸಂಬಂಧಿಸಿದ ವಿಚಾರ ತಪ್ಪಾಗಿ ಪ್ರಸ್ತಾಪವಾಗಿದೆ. ಭಾಷಾನೀತಿ ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು.

83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಶುಕ್ರವಾರ ಮಾತನಾಡಿದ್ದ ಸಮ್ಮೇಳನಾಧ್ಯಕ್ಷ ಪ್ರೊ. ಚಂದ್ರಶೇಖರ ಪಾಟೀಲ, 'ತನ್ವೀರ್ ಸೇಠ್ ಶಿಕ್ಷಣ ಸಚಿವರಾಗಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಭಾಷಾನೀತಿ ವಿಚಾರದಲ್ಲಿ ಅವರು ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಅವರನ್ನು ಸಂಪುಟದಿಂದ ಕೈಬಿಡಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು.

ಚಂಪಾ ಅವರ ಮಾತಿಗೆ ಸಮ್ಮೇಳನದ ವೇದಿಕೆಯಲ್ಲಿ ಶನಿವಾರ ಪ್ರತಿಕ್ರಿಯಿಸಿದ ತನ್ವೀರ್ ಸೇಠ್, 'ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾನು ಮಾಡಿರುವ ಕೆಲಸ ನನಗೆ ತೃಪ್ತಿ ನೀಡಿದೆ. ಕನ್ನಡ ನಾಡು- ನುಡಿ, ನೆಲ- ಜಲ ರಕ್ಷಣೆಯ ವಿಚಾರದಲ್ಲಿ ನಮ್ಮ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಕನ್ನಡದ ಕೆಲಸ ಮಾಡಲು ಅಧಿಕಾರವೇ ಬೇಕೆಂದಿಲ್ಲ. ಕನ್ನಡ ಭಾಷೆ ವಿಷಯದಲ್ಲಿ ನಾನು ಬೇರೆಯವರಿಂದ ಕಲಿಯಬೇಕಾದ ಅಗತ್ಯವಿಲ್ಲ. ಕೊನೆಯ ಉಸಿರು ಇರುವವರೆಗೂ ನಾನು ಕನ್ನಡಕ್ಕಾಗಿ ಹೋರಾಡುತ್ತೇನೆ' ಎಂದರು.

'ಪ್ರಾಥಮಿಕ ಶಿಕ್ಷಣ ಕಾಯ್ದೆ ಹಾಗೂ ಭಾಷಾನೀತಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ನೆರೆ ರಾಜ್ಯ ಹಾಗೂ ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಿಗೆ ಅಗತ್ಯವಾದ ಸೌಲಭ್ಯಗಳನ್ನು ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ' ಎಂದು ಹೇಳಿದರು.

ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್, 'ನೀವು ಆಡಿದ ಮಾತನ್ನು ಅನುಷ್ಠಾನಕ್ಕೆ ತನ್ನಿ. ಉನ್ನತ ಶಿಕ್ಷಣದಲ್ಲಿ ಕನ್ನಡ ಪ್ರಾಧ್ಯಾಪಕರ ಸಮಸ್ಯೆಗಳೂ ಸಾಕಷ್ಟಿವೆ. ಆ ಸಮಸ್ಯೆಗಳನ್ನೂ ಬಗೆಹರಿಸಲು ಸರ್ಕಾರ ಮುಂದಾಗಬೇಕು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT