ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಸಡಕ್ ಅನುದಾನ ಇಲ್ಲ–ಶಾಸಕ

Last Updated 27 ನವೆಂಬರ್ 2017, 6:17 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವು ರಸ್ತೆ ಕಾಮಗಾರಿಗಳು ಬಾಕಿ ಇವೆ. ಕೇಂದ್ರದ ಈಗಿನ ಎನ್‌ಡಿಎ ಸರ್ಕಾರ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ವರ್ಷಕ್ಕೆ 20 ಕಿಲೋಮೀಟರ್ ರಸ್ತೆ ನಿರ್ಮಿಸಲು ನೀಡುವ ಅನುದಾನ ನೀಡುತ್ತಿಲ್ಲ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ತಾಲ್ಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ವಿವೇಕಾನಂದನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಹಿಂದಿನ ಯುಪಿಎ ಸರ್ಕಾರ ಆಡಳಿ ಇದ್ದಾಗ ಪ್ರತಿವರ್ಷ ರಸ್ತೆ ಕಾಮಗಾರಿ ಕೈಗೊಂಡು, ಗ್ರಾಮೀಣ ರಸ್ತೆಗಳು ಬಹುತೇಕ ಪೂರ್ಣಗೊಂಡಿದ್ದವು. ಆದರೆ ಇಂದಿನ ಕೇಂದ್ರ ಸರ್ಕಾರ ಈ ಯೋಜನೆಯಡಿ ಯಾವುದೇ ಅನುದಾನ ನೀಡುತ್ತಿಲ್ಲ. ರಾಜ್ಯ ಸರ್ಕಾರ ತಮ್ಮ ಅನುದಾನದಲ್ಲಿ ಹೆಚ್ಚಿನ ಪಾಲು ತಾಲ್ಲೂಕಿಗೆ ನೀಡಿದ್ದು, ರಸ್ತೆಗಳ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ತಾಲ್ಲೂಕಿನಲ್ಲಿ ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುತ್ತಿದ್ದು, ಅಂಬೇಡ್ಕರ್ ಸಮುದಾಯ ಭವನದ ನಿರ್ಮಾಣ ಪೂರ್ಣಗೊಂಡಿದೆ. ಬಾಬು ಜಗಜೀವನ ರಾಂ ಭವನದ ನಿರ್ಮಾಣ ಅಂತಿಮ ಹಂತದಲ್ಲಿದ್ದು, ಬಡ ಹಾಗೂ ಮಧ್ಯಮ ವರ್ಗದವರಿಗೆ ವಿವಿಧ ಕಾರ್ಯಕ್ರಮ ನೆರವೇರಿಸಲು ಅನುಕೂಲವಾಗಲಿದೆ ಎಂದರು.

ಜನವರಿ 1 ರಿಂದ ನಗರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಲಿದ್ದು, ಹಳೇ ಬಸ್ ನಿಲ್ದಾಣದ ಬಳಿ ಸ್ಥಳ ಗುರುತಿಸಲಾಗಿದೆ. ತಾಲ್ಲೂಕಿಗೆ ವೈದ್ಯಕೀಯ ಕಾಲೇಜು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅಗತ್ಯವಿರುವ ನರ್ಸಿಂಗ್ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

‘ತಾಲ್ಲೂಕಿನಲ್ಲಿ ಈ ಹಿಂದೆಂದಿಗಿಂತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಾಗಿವೆ. ಈ ಹಿಂದೆ ಅಧಿಕಾರದಲ್ಲಿ ಇದ್ದವರು ಮಾಡಲಾಗದೇ ಈಗ ಏನೂ ಕೆಲಸವಾಗಿಲ್ಲ ಎಂದು ಅನಗತ್ಯವಾಗಿ ಟೀಕೆ ಮಾಡುವವರು ಸತ್ಯ ಪರಾಮರ್ಶಿಸಬೇಕಿದೆ. ಶಾಸಕರೊಂದಿಗೆ ಕಾರ್ಯಕರ್ತರು ಇರುವುದಿಲ್ಲ ಎನ್ನುವ ಆರೋಪದಲ್ಲಿ ಹುರಳಿಲ್ಲ. ನಾವು ನಿತ್ಯ ಕ್ಷೇತ್ರಕ್ಕೆ ಬರುತ್ತಿದ್ದು, ಎಲ್ಲಾ ಸಂದರ್ಭದಲ್ಲಿಯೂ ಮುಖಂಡರು ಜತೆ ಇರಲು ಸಾಧ್ಯವೇ’ ಎಂದರು.

ಕಾಂಗ್ರೆಸ್‌ ಮುಖಂಡ ತಿ.ರಂಗರಾಜು ಮಾತನಾಡಿ, ಶಾಸಕರು ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಕುರಿತು ಕರಪತ್ರವನ್ನು ಹೊರ ತರಲಾಗಿದೆ. ಯಾರೇ ಆದರೂ ಈ ಕಾಮಗಾರಿಗಳನ್ನು ಪರಿಶೀಲಿಸಬಹುದಾಗಿದೆ. ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಶಾಸಕರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ ಬಿ.ಎಚ್‌.ಕೆಂಪಮ್ಮ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಅರುಣಾ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಬಿ.ಸಿ.ಆನಂದ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ತಿಪ್ಪೂರು ಎಂ.ಬೈರೇಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಅಶೋಕ್, ಮುಖಂಡರಾದ ಆದತ್ಯ ನಾಗೇಶ್, ಎಚ್‌.ಪಿ.ಸುಬ್ಬೇಗೌಡ, ಆಂಜಿನಪ್ಪ, ರಾಮಣ್ಣ ಭಾಗವಹಿಸಿದ್ದರು.

ತಾಲ್ಲೂಕಿನಲ್ಲಿ 62 ಸಾವಿರ ಪಡಿತರ ಚೀಟಿ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ತಾವು ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಟಿ.ವೆಂಕಟರಮಣಯ್ಯ ತಿಳಿಸಿದರು. ಮುಖ್ಯಮಂತ್ರಿ ಕ್ಷೇತ್ರ ಹೊರತುಪಡಿಸಿದರೆ ಕೆಐಎಡಿಬಿ ಅನುದಾನದಲ್ಲಿ ಕೈಗಾರಿಕಾ ಪ್ರದೇಶದಲ್ಲಿ ರಸ್ತೆಗಳಾಗಿರುವುದು ತಾಲ್ಲೂಕಿನಲ್ಲಿಯೇ. ಅಂತೆಯೇ ಈ ಹಿಂದೆ ಇದ್ದ ಸರ್ಕಾರದಲ್ಲಿ ಪಡಿತರ ಚೀಟಿ ವಿತರಣೆ ಸಮರ್ಪಕವಾಗಿರಲಿಲ್ಲ. ಪಡಿತರ ವಿತರಣೆಯಲ್ಲೂ ಗೊಂದಲವಿತ್ತು. ತಾಲ್ಲೂಕಿನಲ್ಲಿ ಈಗ 62 ಸಾವಿರ ಪಡಿತರ ಚೀಟಿಗಳಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT