ವಿಜಯಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪುನಃ ಅಧಿಕಾರ ತರುವ ನಿಟ್ಟಿನಲ್ಲಿ ಯುವಕರು ಬೂತ್ ಮಟ್ಟದಿಂದಲೇ ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ದೇವನಹಳ್ಳಿ ಬ್ಲಾಕ್ ಕೆಪಿಸಿಸಿ ಸದಸ್ಯ ವಿ.ಮಂಜುನಾಥ್ ಹೇಳಿದರು.
ಬಸ್ ನಿಲ್ದಾಣದ ಬಳಿಯಿರುವ ಪೆಟ್ರೋಕ್ ಬಂಕ್ ನ ಕಚೇರಿಯಲ್ಲಿ ಮಂಗಳವಾರ, ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಯುವಕರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು.
ದೇಶದಲ್ಲಿ ದೊಡ್ಡ ಸಂಪನ್ಮೂಲ ಯುವಜನಾಂಗ. ಸಿಗುವಂತಹ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ದೇಶ ಕಟ್ಟುವ ಕಾರ್ಯ ಮಾಡಬೇಕು. ಎಲ್ಲಾ ಜಾತಿ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಬೇಕಾದರೆ, ಅರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದರೆ ಯುವಕರಿಂದ ಮಾತ್ರವೇ ಸಾಧ್ಯ. ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಅಧಿಕಾರಕ್ಕೆ ತರುವ ಶಪಥ ಮಾಡಬೇಕು ಎಂದರು.
ವಿಜಯಪುರ ನಗರ ಘಟಕದ ಅಧ್ಯಕ್ಷ ವಿ.ಎಂ.ನಾಗರಾಜ್ ಮಾತನಾಡಿ, ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ಮನ ಮುಟ್ಟುವಂತೆ ತಿಳಿಸಿಕೊಡಬೇಕು. ಯುವಜನರು ಸಂಘಟಿತರಾಗಿ ಸಾಮಾಜಿಕ ಕಾರ್ಯಕ್ರಮಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದರು.
ನಗರದ ವಿವಿಧ ವಾರ್ಡುಗಳ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ನಗರ ಘಟಕದ ಕಾರ್ಯದರ್ಶಿ ಎಸ್.ಮಂಜುನಾಥ್, ಮುಖಂಡ ಸಂಪತ್ ಕುಮಾರ್, ಧರ್ಮಪುರ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಪುರಸಭಾ ಸದಸ್ಯ ಗೌಸ್ ಖಾನ್, ಗಿರೀಶ್ ಯಾದವ್, ಫೈಜಲ್ ಇದ್ದರು.