ಮಂಡ್ಯ: ಮಾತೃಪೂರ್ಣ ಯೋಜನೆ ಜಾರಿಗೆ ಮೂಲಸೌಕರ್ಯ ಹಾಗೂ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೆಂಗಳೂರು- ಮೈಸೂರು ಹೆದ್ದಾರಿ ಮೂಲಕ ಜಿಲ್ಲಾಕಾರಿ ಕಚೇರಿಗೆ ಬಂದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಗಾಂಧಿ ಜಯಂತಿಯಂದು ಯೋಜನೆ ಜಾರಿಗೊಳಿಸಲಾಗಿದೆ. ಇದಕ್ಕೆ ಹಲವು ಸಂಘಟನೆಗಳು, ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿವೆ. ಆದರೆ ನಾವು ಯೋಜನೆಯನ್ನು ಸ್ವಾಗತಿಸಿ ಜಾರಿಗೆ ಕೆಲವು ಸಲಹೆ, ಸೂಚನೆಗಳನ್ನು ನೀಡಿದ್ದೆವು. ಆದರೆ ನಮ್ಮ ಸಲಹೆಗಳನ್ನು ಸರ್ಕಾರ ಪರಿಗಣಿಸಿಲ್ಲ. ಹೀಗಾಗಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ಯೋಜನೆ ಜಾರಿಗೆ ಅವಶ್ಯವಿರುವ ಸ್ಟೌ, ಕುಕ್ಕರ್ ಹಾಗೂ ಇತರ ಸಲಕರಣೆಗಳನ್ನು ಒದಗಿಸಿಲ್ಲ. ಹೀಗಾಗಿ ಕೂಡಲೇ ಆರ್ಥಿಕ ಸೌಲಭ್ಯ ನೀಡಬೇಕು ಎಂದರು.
ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷೆ ಟಿ.ಎಚ್.ಪಾರ್ವತಮ್ಮ, ಪ್ರಧಾನ ಕಾರ್ಯದರ್ಶಿ ಬಿ.ಎನ್.ತನುಜಾ, ಎಚ್.ವಿಜಯಲಕ್ಷ್ಮಿ, ಎಂ.ವಸಂತಾ, ರುಕ್ಮಿಣಿದೇವಿ, ಬಿ.ಎನ್.ಚಂದ್ರಕಲಾ ಹಾಜರಿದ್ದರು.