ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಸಂಸ್ಕೃತಿಗೆ ವಿಶ್ವದೆಲ್ಲೆಡೆ ಮನ್ನಣೆ

‘ನಾವು ಭಾರತೀಯರು’ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ರಾಮಚಂದ್ರ ಅಭಿಪ್ರಾಯ
Last Updated 30 ನವೆಂಬರ್ 2017, 10:39 IST
ಅಕ್ಷರ ಗಾತ್ರ

ಚಾಮರಾಜನಗರ: ‘ವಿಶ್ವ ಮನ್ನಣೆ ಗಳಿಸಿರುವ ಭಾರತೀಯ ಸಂಸ್ಕೃತಿಯನ್ನು ಯುವಜನಾಂಗ ಉತ್ತಮ ರೀತಿಯಲ್ಲಿ ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಭಾರತ ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಎಂ. ರಾಮಚಂದ್ರ ಸಲಹೆ ನೀಡಿದರು.

ನಗರದ ಜೆ.ಎಚ್. ಪಟೇಲ್‌ ಸಭಾಂಗಣದಲ್ಲಿ ಬುಧವಾರ ಭಾರತ ಸೇವಾದಳ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ ಭಾವೈಕ್ಯ ಮಕ್ಕಳ ಮೇಳದ ಅಂಗವಾಗಿ ನಡೆದ ‘ನಾವು ಭಾರತೀಯರು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಸಂಸ್ಕೃತಿ ಹೊರದೇಶಗಳಲ್ಲಿ ಸಾಕಷ್ಟು ಮನ್ನಣೆ ಗಳಿಸಿದೆ. ಅಲ್ಲಿನ ಜನರು ಭಾರತೀಯರನ್ನು ಹೆಚ್ಚು ಗೌರವಿಸುತ್ತಾರೆ. ಆದರೆ, ನಾವು ನಮ್ಮ ಸಂಸ್ಕೃತಿಯನ್ನು ಬೆಳೆಸುವ ಬದಲು ಬೇರೆ ರಾಷ್ಟ್ರಗಳ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹಲವು ಮಹನೀಯರು ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು. ಅವರ ತ್ಯಾಗದಿಂದಲೇ ಪ್ರಸ್ತುತ ಎಲ್ಲರೂ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಆದರೆ, ದೇಶಾಭಿಮಾನ ಮತ್ತು ನಾಡು, ನುಡಿಯನ್ನು ಮರೆಯುತ್ತಿದ್ದೇವೆ ಎಂದು ವಿಷಾದಿಸಿದರು.

ಹಿರಿಯ ಸಾಹಿತಿ ಕೆ. ವೆಂಕಟರಾಜು ಮಾತನಾಡಿ, ಯುದ್ಧಕಾಲದಲ್ಲಿ ಮಾತ್ರ ನಾವೆಲ್ಲ ಒಂದೇ ಎಂಬ ಭಾವನೆ ಮೂಡುತ್ತದೆ. ಆದರೆ, ಶಾಂತಿಯ ಸಂದರ್ಭದಲ್ಲಿ ಜಾತಿ, ಧರ್ಮ ಎಂದು ಪ್ರತ್ಯೇಕ ಮಾಡಿಕೊಳ್ಳುತ್ತೇವೆ. ನಾವು ಒಂದೇ ಎಂದು ತೋರಿಸಲು ನಮಗೆ ಒಬ್ಬ ಶತ್ರುಬೇಕು ಎನ್ನುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಹಿಂದೂ, ಮುಸ್ಲಿಂ, ಕೈಸ್ತ, ಬೌದ್ಧ, ಜೈನರು ಎಂದು ಭೇದ ಮಾಡದೆ ಎಲ್ಲರೂ ಒಂದೇ ಎನ್ನುವುದು ನಿಜವಾದ ದೇಶಭಕ್ತಿ. ಇದು ಎಲ್ಲರಲ್ಲಿಯೂ ಮೂಡಬೇಕು. ಎಲ್ಲರನ್ನು ಸಮಾನವಾಗಿ ಕಾಣುವ ಹಾಗೂ ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸೇವಾದಳದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಎಂ. ನರಸಿಂಹಮೂರ್ತಿ ಮಾತನಾಡಿದರು. ಈ ವೇಳೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶ್ತಸಿ ಪಡೆದ ವಿದ್ಯಾರ್ಥಿನಿ ಜುನೇರಾ ಹರಂ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವನ್ಯಜೀವಿ ಸಲಹಾ ಮಂಡಳಿ ಸದಸ್ಯ ಮಲ್ಲೇಶಪ್ಪ, ಸೇವಾದಳದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಖಜಾಂಚಿ ಚಂದ್ರಶೇಖರ್‌, ಕಾರ್ಯದರ್ಶಿ ನಾಗರಾಜು, ಶಿಕ್ಷಕರಾದ ಜಾರ್ಜ್‌ ಫಿಲಿಪ್‌, ಪಳನಿಸ್ವಾಮಿ ಜಾಗೇರಿ ಹಾಜರಿದ್ದರು.

ವೇದಿಕೆ ಕಾರ್ಯಕ್ರಮದ ಬಳಿಕ ಕಲಾವಿದೆ ಸುಮಾ ರಾಜ್‌ಕುಮಾರ್‌ ಅವರು ಮಾತನಾಡುವ ಗೊಂಬೆ ಪ್ರದರ್ಶದ ಮೂಲಕ ಮಕ್ಕಳನ್ನು ರಂಜಿಸಿದರು.

*
ವಿದ್ಯಾರ್ಥಿ ದಿಸೆಯಿಂದಲೇ ಎಲ್ಲರೂ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ದೇಶದ ಅಭಿವೃದ್ಧಿಗಾಗಿ ದುಡಿಯಬೇಕು.
–ಎಂ. ರಾಮಚಂದ್ರ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT