ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಟಿಕೆಟ್: ಪರಮೇಶ್ವರ

Last Updated 1 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಂದಿನ ಚುನಾವಣೆಯಲ್ಲಿ ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಹೇಳಿದ್ದಾರೆ. ‌

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್.ಸಿ. ಮಹದೇವಪ್ಪ, ರಾಮಲಿಂಗಾರೆಡ್ಡಿ ತಮ್ಮ ಮಕ್ಕಳಿಗೆ ಟಿಕೆಟ್ ಕೊಡುವ ಪ್ರಯತ್ನ ನಡೆಸಿರುವ ಮಧ್ಯೆಯೇ ಪರಮೇಶ್ವರ ಕುಟುಂಬ ರಾಜಕಾರಣದ ಬಗ್ಗೆ ಗರಂ ಆಗಿ ಮಾತನಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಟಿಕೆಟ್, ಮೂರು ಬಾರಿ ಸತತವಾಗಿ ಸೋತವರಿಗೆ ಟಿಕೆಟ್‌ ಇಲ್ಲ ಎಂಬ ನಿಯಮ ಪಕ್ಷದಲ್ಲಿದೆ. ಆದರೆ, ಇದನ್ನು ಕಡ್ಡಾಯವಾಗಿ ಪಾಲಿಸುತ್ತಿಲ್ಲ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷ ಯಾವ ರೀತಿಯ ಮಾರ್ಗಸೂಚಿಗಳನ್ನು ನೀಡುತ್ತದೊ ಆ ಪ್ರಕಾರ ಟಿಕೆಟ್ ಹಂಚಿಕೆ ಮಾಡಲಾಗುವುದು’ ಎಂದರು.

‘ವಿಧಾನಸಭಾ ಚುನಾವಣೆಗೆ ದೃಷ್ಟಿಯಿಂದ ರಾಜ್ಯ ಪ್ರವಾಸ ಕೈಗೊಳ್ಳುವ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿಯವರು ಯಾತ್ರೆ ಮಾಡಿದ ತಕ್ಷಣ ಅವರು ಚುನಾವಣೆಗೆ ತಯಾರಾಗಿದ್ದಾರೆ ಎಂದಲ್ಲ. ನಾವು ಯಾರನ್ನೂ ಅನುಸರಿಸುವುದಿಲ್ಲ. ನಮ್ಮದೇ ಆದ ರಣತಂತ್ರ ಇದೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ’ ಎಂದರು.

‘ರಾಜ್ಯದಲ್ಲಿ ಯಾತ್ರೆ ಕೈಗೊಳ್ಳುವ ಸಂಬಂಧ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾವೆಲ್ಲ ಸೇರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಮ್ಯಾ ಎಲ್ಲೂ ಹೇಳಿಲ್ಲ. ಪಕ್ಷದಿಂದಲೂ ಆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಅವರು ಯಾರೊಂದಿಗೆ ಸಂಪರ್ಕದಲ್ಲಿ ಇದ್ದಾರೊ ಗೊತ್ತಿಲ್ಲ. ಅವರ ಹುಟ್ಟುಹಬ್ಬದ ದಿನದಂದು ನಾನೇ ಕರೆ ಮಾಡಿ ಶುಭಾಶಯ ತಿಳಿಸಿದ್ದೇನೆ’ ಎಂದು ಪರಮೇಶ್ವರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT