ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಯೂರವರ್ಮ ಪ್ರಶಸ್ತಿ ಘೋಷಣೆಯಾಗಲಿ: ಸರ್ಕಾರಕ್ಕೆ ಒತ್ತಾಯ

Last Updated 4 ಡಿಸೆಂಬರ್ 2017, 5:16 IST
ಅಕ್ಷರ ಗಾತ್ರ

ಶಿಕಾರಿಪುರ: ‘ಪ್ರಥಮ ಕನ್ನಡ ಸಾಮ್ರಾಜ್ಯ ಸ್ಥಾಪಿಸಿದ ರಾಜ ಮಯೂರವರ್ಮನ ಹೆಸರಿನಲ್ಲಿ ಇಂದಿನವರೆಗೂ ರಾಜ್ಯ ಸರ್ಕಾರ ಪ್ರಶಸ್ತಿ ಘೋಷಿಸದೇ ನಿರ್ಲಕ್ಷ್ಯ ತೋರಿರುವುದು ದುರಂತದ ಸಂಗತಿಯಾಗಿದೆ’ ಎಂದು ಹಿರಿಯ ಸಾಹಿತಿ ನಾ.ಡಿಸೋಜಾ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಭಾನುವಾರ ಕನ್ನಡ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಆಯೋಜಿಸಿದ್ದ ಮಯೂರ ಕನ್ನಡ ಪ್ರತಿಭಾನ್ವೇಷಣೆ ಪರೀಕ್ಷೆಯ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪಲ್ಲವರಿಂದ ಕನ್ನಡ ನಾಡನ್ನು ಉಳಿಸಿದ ಕೀರ್ತಿ ಮಯೂರವರ್ಮನಿಗೆ ಸಲ್ಲುತ್ತದೆ. ಅವನಂತೆ ನಾಡನ್ನು ರಕ್ಷಣೆ ಮಾಡಿದ ದೊರೆ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಜನಿಸಿದ್ದರೆ ಅಲ್ಲಿನ ಜನರು ಹಾಗೂ ಸರ್ಕಾರ ಆ ರಾಜನನ್ನು ಕೊಂಡಾಡುತ್ತಿದ್ದರು. ಆದರೆ, ನಮ್ಮ ರಾಜ್ಯದಲ್ಲಿ ಮಯೂರವರ್ಮನನ್ನು ಕೊಂಡಾಡುವ ದೃಶ್ಯವೇ ಕಂಡು ಬರುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಲವು ವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ಘೋಷಣೆ ಮಾಡುತ್ತಿದೆ. ಅದೇ ರೀತಿ ಕನ್ನಡ ನಾಡು ನುಡಿ ರಕ್ಷಣೆ ಮಾಡಿದ ರಾಜ ಮಯೂರವರ್ಮನ ಹೆಸರಿನಲ್ಲಿ ಕೂಡ ಪ್ರಶಸ್ತಿ ಘೋಷಿಸಬೇಕು.

ಆತ ಜನಿಸಿದ, 2000 ವರ್ಷಗಳ ಇತಿಹಾಸ ಹೊಂದಿರುವ ತಾಳಗುಂದ ಗ್ರಾಮದ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಲೇಖಕ ಶಿಕಾರಿಪುರ ಕೃಷ್ಣಮೂರ್ತಿ, ಕನ್ನಡ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷ ಎಂ.ನವೀನ್‌ಕುಮಾರ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT