ನವದೆಹಲಿ: ವಿಯೆಟ್ನಾಂನಿಂದ ಕಳಪೆ ಗುಣಮಟ್ಟದ ಮೆಣಸು ಆಮದು ಆಗುತ್ತಿರುವುದರಿಂದ ರಾಜ್ಯದ ಮೆಣಸು ಬೆಳೆಗಾರರಿಗೆ ತೀವ್ರ ನಷ್ಟವಾಗುತ್ತಿದೆ. ಈ ಕುರಿತು ಪರಿಶೀಲನೆ ನಡೆಸಬೇಕು ಎಂದು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಸುರೇಶ ಪ್ರಭು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮನವಿ ಮಾಡಿದರು.
ಮೆಣಸು ಆಮದಿನಿಂದಾಗಿ ಬೆಲೆ ಕುಸಿದಿದೆ. ಇದರಿಂದ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ವಿಯೆಟ್ನಾಂನ ಮೆಣಸು ಶ್ರೀಲಂಕಾ ಮೂಲಕ ಭಾರತಕ್ಕೆ ಅಕ್ರಮವಾಗಿಯೂ ಆಮದು ಆಗುತ್ತಿದ್ದು, ಕೂಡಲೇ ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕೋರಲಾಗಿದೆ.
ರಾಜ್ಯದಲ್ಲಿ ಉತ್ಕೃಷ್ಟ ಗುಣಮಟ್ಟದ ಮೆಣಸನ್ನು ಬೆಳೆಯಲಾಗುತ್ತಿದೆ. ಬೆಲೆ ಕುಸಿದಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರವು ಮೆಣಸಿನ ಆಮದನ್ನು ನಿಷೇಧಿಸುವ ಮೂಲಕ ಸ್ಥಳೀಯ ರೈತರ ನೆರವಿಗೆ ಧಾವಿಸಬೇಕು ಎಂದೂ ಅವರು ಆಗ್ರಹಿಸಿದರು.
ಈ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ ಪ್ರಭು ಭರವಸೆ ನೀಡಿದರು.