ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್. ಪಾಲಯ್ಯ ಅವರು ಭೂ ಪರಿವರ್ತನೆಗೆ ಸಂಬಂಧಿಸಿದ ಅರ್ಜಿ ಇತ್ಯರ್ಥಕ್ಕೆ ವಿಳಂಬ ಮಾಡಿದ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ (ಕೆಎಟಿ) ಆದೇಶವಿದ್ದರೂ ಭೂ ಪರಿವರ್ತನೆಗೆ ಸಂಬಂಧಿಸಿದ ಅರ್ಜಿಯೊಂದನ್ನು ಇತ್ಯರ್ಥಗೊಳಿಸದೆ ವಿಳಂಬ ಮಾಡಿದ ಎಸ್. ಪಾಲಯ್ಯ ಅವರನ್ನು ಜೈಲಿಗೆ ಕಳುಹಿಸುವುದಾಗಿ ಹೈಕೋರ್ಟ್ ಗುರುವಾರ ಮೌಖಿಕವಾಗಿ ಎಚ್ಚರಿಕೆ ನೀಡಿತ್ತು.
ನಗರದ ಮಂಗಿಲಾಲ್ ಎಂಬುವರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪಾಲಯ್ಯ ಮತ್ತು ಜಿಲ್ಲಾಧಿಕಾರಿ ಕಚೇರಿ ಸಹಾಯಕ (ಒ.ಎ) ಎಂ.ಸಿ. ನರಸಿಂಹ ಮೂರ್ತಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತ್ತು.
‘ಕೆಎಟಿ ಆದೇಶವಿದ್ದರೂ ಅರ್ಜಿಯನ್ನು ಏಕೆ ವಿಲೇವಾರಿ ಮಾಡಿಲ್ಲ. ಇಂತಹ ಅರ್ಜಿಗಳ ವಿಲೇವಾರಿಗೆ ನೀವು ಲಕ್ಷಗಟ್ಟಲೆ ಕೇಳುತ್ತೀರಿ ಎಂಬ ದೂರುಗಳು ಬಂದಿವೆ. ಸಗಣಿ ತಿನ್ನುವ ಹಲ್ಕಟ್ ಕೆಲಸ ಮಾಡಲು ನಿಮಗೆ ನಾಚಿಕೆಯಾಗೊಲ್ವೇ’ ಎಂದು ನ್ಯಾಯಮೂರ್ತಿ ಕಿಡಿ ಕಾರಿದ್ದರು.