ಊರ್ಡಿಗೆರೆ: ಅಂತರ್ಜಲ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ವದೇಕಲ್ಲು ಗ್ರಾಮದಲ್ಲಿ ₹75 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಬಿ.ಸುರೇಶ್ಗೌಡ ತಿಳಿಸಿದರು.
ಭಾನುವಾರ ಗ್ರಾಮದಲ್ಲಿ ಚೆಕ್ ಡ್ಯಾಂಗೆ ಶಿಲಾನ್ಯಾಸ ನೆರವವೇರಿಸಿದ ಬಳಿಕ ಮಾತನಾಡಿದ ಅವರು, ‘ಈ ಭಾಗದಲ್ಲಿ ಇಂದಿಗೂ ಕೂಡ ಪಶುಪಾಲನೆ ಹೆಚ್ಚಾಗಿದೆ. ಜಾನುವಾರುಗಳಿಗೆ, ಪ್ರಾಣಿ ಪಕ್ಷಿಗಳಿಗೆ ಸದಾ ಕಾಲ ಕುಡಿಯುವ ನೀರು ಸಿಗಬೇಕು.ಇದಕ್ಕಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ’ ಎಂದರು.
ಅಂದಾಜು ಪಟ್ಟಿಯಲ್ಲಿ ಇರುವಂತೆ ಕಾಮಗಾರಿ ನಡೆಸಬೇಕು. ಗುಣಮಟ್ಟದಲ್ಲಿ ಲೋಪವಾದರೆ ಯಾರನ್ನೂ ಬಿಡುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಗ್ರಾಮಾಂತರ ಕ್ಷೇತ್ರದಲ್ಲಿ ಎಲ್ಲ ರೀತಿಯಲ್ಲೂ ಅಭಿವೃದ್ಧಿಯೂ ಆಗಿದೆ. ಶುದ್ದ ಕುಡಿಯುವ ನೀರು, ನಿರಂತರ ವಿದ್ಯುತ್ ಸೌಲಭ್ಯ, ಎಲ್ಲ ಕೊಳವೆಬಾವಿಗಳಿಗೆ 25 ಕೆವಿ ಸಾಮರ್ಥ್ಯದ ಟ್ರಾನ್ಸ್ ಫಾರ್ಮರ್ (ಟಿಸಿ) ಉಚಿತವಾಗಿ ಅಳವಡಿಸಲಾಗಿದೆ.ಉತ್ತಮ ಸಂಪರ್ಕ ರಸ್ತೆಗಳನ್ನು ನಿರ್ಮಿಸಿಕೊಡಲಾಗಿದೆ ಎಂದರು.
ಗುಡಿಸಲು ಮುಕ್ತ ಕ್ಷೇತ್ರವನ್ನಾಗಿ ಮಾಡಲು 18,383 ಮನೆಗಳು ಮುಂಜೂರಾತಿ ಪಡೆಯಲಾಗಿದೆ. ಶಾಸಕರ ಅನುದಾನದಿಂದ ಸರ್ಕಾರಿ ಶಾಲೆಗಳನ್ನು ಹೈಟೆಕ್ ಶಾಲೆಗಳಾಗಿ ಅಭಿವೃದ್ಧಿಪಡಿಸಲಾಗಿದೆ. ಸೀತಕಲ್ಲು, ಊರುಕೆರೆ ಶಾಲೆಗಳ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಮುಖಂಡ ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಮತಾ ಕಾಂತರಾಜು, ಗ್ರಾ.ಪಂ ಅಧ್ಯಕ್ಷೆ ಲಕ್ಮೀದೇವಿರಾಮಮೂರ್ತಿ, ಕುಮಾರ್ ಇದ್ದರು.