ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾತಿಗೆ ತಪ್ಪಿದ ದೇವೇಗೌಡ’

Last Updated 12 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ವಿಜಯಪುರ: ‘ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಬಸವಣ್ಣನ ಹೆಸರು ಇಡಲು ಪ್ರಯತ್ನಿಸುವುದಾಗಿ ಅಧಿಕಾರದಲ್ಲಿದ್ದಾಗ ಭರವಸೆ ನೀಡಿದ್ದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು, ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ಬಸವ ಅಭಿಮಾನಿಗಳಿಗೆ ದ್ರೋಹ ಎಸಗಿದ್ದಾರೆ’ ಎಂದು ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಸಂಘಟಕ ದಯಾನಂದ ಸ್ವಾಮೀಜಿ ದೂರಿದರು.

‘ಬಸವಣ್ಣನ ಹೆಸರಿಡುವಂತೆ ಒತ್ತಾಯಿಸಿ ನಡೆಯುತ್ತಿದ್ದ ಹೋರಾಟದಲ್ಲಿ ಪಾಲ್ಗೊಂಡಿದ್ದ ದೇವೇಗೌಡ, ಚುನಾವಣೆ ಮುಗಿಯುತ್ತಿದ್ದಂತೆ, ಬೇಡಿಕೆ ಈಡೇರಿಸಲಾಗುವುದು ಎಂದು ಹೇಳಿದ್ದರು. ನಂತರ ಕೇಳಿದರೆ, ಆಯ್ತು, ಮುಂದೆ ನೋಡೋಣ ಎಂದರಾದರೂ, ನಾಮಕರಣ ಮಾಡಲಿಲ್ಲ’ ಎಂದು ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

‘ವಿರೋಧದ ನಡುವೆಯೂ ಟಿಪ್ಪು ಜಯಂತಿ ಆಚರಿಸುವ ರಾಜ್ಯ ಸರ್ಕಾರ, ಬಸವಣ್ಣನ ಹೆಸರನ್ನು ಗುಲ್ಬರ್ಗಾ ವಿ.ವಿ.ಗೆ ನಾಮಕರಣ ಮಾಡಲು ಮನಸ್ಸು ಮಾಡುತ್ತಿಲ್ಲ. ಆಡಳಿತ ನಡೆಸಿದ ಎಲ್ಲ ಪಕ್ಷಗಳು ಈ ವಿಷಯದಲ್ಲಿ ವಿಫಲ ಆಗಿವೆ’ ಎಂದು ಅವರು ಕಿಡಿಕಾರಿದರು.

‘ಶಿಫಾರಸು ಮಾಡಿ’: ‘ವಿಧಾನಸಭಾ ಚುನಾವಣೆಗೆ ಮುನ್ನವೇ ರಾಜ್ಯ ಸರ್ಕಾರ, ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಇದು ಸಾಧ್ಯವಾಗದಿದ್ದರೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ’ ಎಂದರು.

‘ಲಿಂಗಾಯತ ಚಳವಳಿಯ ಮುಂಚೂಣಿಯಲ್ಲಿರುವ ರಾಜಕೀಯ ಮುಖಂಡರು ತಮ್ಮ ಸ್ವಾರ್ಥಕ್ಕಾಗಿ ಈ ವೇದಿಕೆ ಬಳಸಿಕೊಳ್ಳಬಾರದು. ಈ ಲೋಚನೆಗಳನ್ನು ಹೊಂದಿದ್ದರೆ, ಇಂದೇ ಕೈಬಿಡುವುದು ಒಳ್ಳೆಯದು. ಯಾವುದೇ ಕಾರಣಕ್ಕೂ ರಾಜಕೀಯವನ್ನು ಬೆಂಬಲಿಸುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT