ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲಿನ ಭೀತಿಯಿಂದ ಸಾಮರಸ್ಯ ನಡಿಗೆ

Last Updated 13 ಡಿಸೆಂಬರ್ 2017, 6:14 IST
ಅಕ್ಷರ ಗಾತ್ರ

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಲೇ ಸಚಿವ ರಮಾನಾಥ ರೈ ಸಾಮರಸ್ಯದ ನಡಿಗೆ ಹಮ್ಮಿಕೊಂಡಿದ್ದಾರೆ. ಸಾಮರಸ್ಯ ನಡಿಗೆ ಬದಲು ತೀರ್ಥಯಾತ್ರೆ ಮಾಡಿದ್ದರೆ, ಪುಣ್ಯವಾದರೂ ಸಿಗುತ್ತಿತ್ತು ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಲೇವಡಿ ಮಾಡಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರ ಸಾಮರಸ್ಯ ನಡಿಗೆಯನ್ನು ನೋಡಿದರೆ, ಕೇವಲ ಬಂಟ್ವಾಳ ತಾಲ್ಲೂಕಿನಲ್ಲಿ ಮಾತ್ರ ಸೌಹಾರ್ದವನ್ನು ಸ್ಥಾಪಿಸುವ ಉದ್ದೇಶ ಇದ್ದಂತಿದೆ. ತಮ್ಮ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಚಿವರು ಈ ಕಾರ್ಯಕ್ರಮ ನಡೆಸುತ್ತಿದ್ದು, ಇದನ್ನು ಜಿಲ್ಲೆಯ ಜನರು ಗಮನಿಸುತ್ತಿದ್ದಾರೆ ಎಂದರು.

ಜಿಲ್ಲೆಯಲ್ಲಿ ಸಾಮರಸ್ಯ ಸ್ಥಾಪಿಸುವ ಬಗ್ಗೆ ಸಚಿವ ರಮಾನಾಥ ರೈ ಅವರಿಗೆ ನಿಜವಾದ ಕಾಳಜಿ ಇದ್ದಲ್ಲಿ, ಮಂಗಳೂರಿನಿಂದ ಸಂಪಾಜೆವರೆಗೆ ಸಾಮರಸ್ಯ ನಡಿಗೆ ಹಮ್ಮಿಕೊಳ್ಳಬೇಕು. ಈ ಮೂಲಕ ಇಡೀ ಜಿಲ್ಲೆಯಲ್ಲಿ ಸಾಮರಸ್ಯ ಸ್ಥಾಪಿಸುವ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಸವಾಲು ಹಾಕಿದರು.

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿ ಕಾಡುತ್ತಿದೆ. ತಮ್ಮ ಆಡಳಿತ ವೈಫಲ್ಯ ಮರೆಮಾಚಲು ಹಾಗೂ ಇನ್ನೊಂದು ಕೋಮಿನ ಜನರ ಓಲೈಕೆಗಾಗಿ ಇಂತಹ ಯಾತ್ರೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು.

ಸಾಮರಸ್ಯ ನಡಿಗೆಯ ಬದಲು ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲ ರಾಜಕೀಯ ಪಕ್ಷಗಳ ಸಭೆ ಕರೆದು, ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆಯ ಪರಿಶೀಲನೆ ಮಾಡಬೇಕಿತ್ತು. ಜತೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ಹಿಂದಿರುವ ನೈಜತೆಯನ್ನು ಪತ್ತೆ ಮಾಡಬೇಕಿತ್ತು. ಜಿಲ್ಲೆಯಲ್ಲಿ ಸಾಮರಸ್ಯ ಕಾಪಾಡಲು ಎಲ್ಲ ಜನರ ಸಹಕಾರ ಕೋರುವ ಕೆಲಸವನ್ನು ಸಚಿವರು ಮಾಡಬೇಕಿತ್ತು ಎಂದು ಹೇಳಿದರು.

ಡ್ರಗ್ ಮಾಫಿಯಾ: ಜಿಲ್ಲೆಯಲ್ಲಿ ತಲೆ ಎತ್ತಿರುವ ಡ್ರಗ್ ಮಾಫಿಯಾಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೆ ಡ್ರಗ್‌ ಮಾಫಿಯಾ ಪ್ರಮುಖ ಕಾರಣವಾಗಿದೆ. ನಗರದಲ್ಲಿ ಸಕ್ರಿಯವಾಗಿದ್ದ ಈ ಜಾಲ ಇದೀಗ ಇಡೀ ಜಿಲ್ಲೆಯನ್ನು ವ್ಯಾಪಿಸಿದೆ. ಡ್ರಗ್‌ ಮಾಫಿಯಾ ನಿಯಂತ್ರಿಸದ ಹೊರತು, ಕೋಮು ಸಾಮರಸ್ಯ ಸ್ಥಾಪಿಸುವುದು ಸಾಧ್ಯವಿಲ್ಲ ಎಂದು ತಿಳಿಸಿದರು.

ಮೂಡುಬಿದಿರೆಯಲ್ಲಿ ಹಸೆಮಣೆ ಏರಬೇಕಿದ್ದ ಪ್ರಿಯಾಂಕಾ ಎರಡು ದಿನಗಳಿಂದ ಕಾಣೆಯಾಗಿದ್ದು, ಆಕೆಯ ಪತ್ತೆಗೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಸವಿತಾ ಸಮಾಜದ ಸದಸ್ಯರು, ಲವ್‌ ಜಿಹಾದ್‌ನ ಶಂಕೆ ವ್ಯಕ್ತಪಡಿಸಿದ್ದು, ಕೂಡಲೇ ಪೊಲೀಸರು ಆಕೆಯನ್ನು ಪತ್ತೆ ಮಾಡುವ ಮೂಲಕ ಸತ್ಯಾಂಶವನ್ನು ಬಯಲಿಗೆ ತರಬೇಕು ಎಂದು ಒತ್ತಾಯಿಸಿದರು.

ಎನ್ಐಎ ತನಿಖೆಗೆ ಆಗ್ರಹ

ಹೊನ್ನಾವರದಲ್ಲಿ ನಡೆದ ಪರೇಶ್ ಮೆಸ್ತ ಸಾವಿನ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲ್‌ ಆಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಆರ್‌ಎಸ್‌ಎಸ್‌ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪರೇಶ್‌ ಮೆಸ್ತ ಸಾವು ಈ ಸರಣಿಗೆ ಸೇರಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ, ಹತ್ಯೆ ಪ್ರಕರಣಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ದೂರಿದರು.

* * 

ಪರೇಶ್ ಮೆಸ್ತ ಸಾವಿನ ಪ್ರಕರಣವನ್ನು ಖಂಡಿಸಿ ಮುಂದಿನ ವಾರ ಹೊನ್ನಾವರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಈ ವಿಷಯವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುತ್ತೇನೆ.
ನಳಿನ್‌ಕುಮಾರ್‌ ಕಟೀಲ್‌
ಸಂಸದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT