ದಾಂಡೇಲಿ: ‘ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಅದಕ್ಕಾಗಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢರಾದಾಗ ಬಲಿಷ್ಟ ರಾಷ್ಟ್ರ ನಿರ್ಮಾಣ ಸಾಧ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಧರ್ಮಸ್ಥರ ಗ್ರಾಮಾಭಿವೃದ್ಧಿ ಯೋಜನೆ ಹಳಿಯಾಳ, ಜೋಯಿ ಡಾ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿ ಬಂಧು ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆ ವತಿಯಿಂದ ಶನಿವಾರ ನಡೆದ ಸಾಮೂಹಿಕ ಸತ್ಯ ನಾರಾಯಣ ಪೂಜೆ, ಸಾಧನಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರ ಸಶಕ್ತಿಕರಣಕ್ಕೆ ರಾಜ್ಯ ಸರ್ಕಾರ ವಿವಿಧ ಜನಪಯೋಗಿ ಕಾರ್ಯಕ್ರಮ ಅನುಷ್ಠಾನಗೊಳಿಸಿದೆ. ಇನ್ನು ಕೆಲವೇ ಕೆಲವು ದಿನಗಳೊಳಗೆ ಯೂನಿವರ್ಸಲ್ ಹೆಲ್ತ್ ಸ್ಕೀಮ್ ಎಂಬ ವಿನೂತನ ಆರೋಗ್ಯ ಯೋಜನೆ ಜಾರಿಗೊಳಿಸಿದೆ ಎಂದರು. ಯೋಜನೆಯ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷ ಎನ್.ಜಿ.ಸಾಳುಂಕೆ, ಗೇರು ಅಭಿವೃದ್ಧಿ ನಿಗಮದ ನಿರ್ದೇಶಕ ಮಾಸ್ಕೇರಿ ಎಂ.ಕೆ.ನಾಯಕ, ಜನಜಾಗೃತಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯ ಶಂಕರ ಮುಂಗರವಾಡಿ ಮಾತನಾಡಿದರು.