ನಾಯಕನಹಟ್ಟಿ: ಪ್ರತಿಯೊಬ್ಬರು ವೈಯಕ್ತಿಕ ಶೌಚಾಲಯಗಳ ಬಳಕೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾವಬೇಕು ಎಂದು ಪಿಡಿಒ ಎನ್.ಪಾಲಯ್ಯ ಹೇಳಿದರು.
ಹೋಬಳಿಯ ನೇರಲಗುಂಟೆ ಗ್ರಾಮ ಪಂಚಾಯ್ತಿ ಕಾರ್ಯಲಯದಲ್ಲಿ ಚುನಾಯಿತ ಪ್ರತಿನಿಧಿಗಳು, ಹಾಗೂ ಸಂಘ ಸಂಸ್ಥೆಗಳ ಮಹಿಳಾ ಪ್ರತಿನಿಧಿಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಅಭಿಯಾನ ಹಾಗು ಗ್ರಾಮ ಸ್ವಚ್ಛತಾ ದಿವಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರವು ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಉದ್ಯೋಗ ಖಾತ್ರಿ, ಕೃಷಿ ಪೂರಕ ಸೌಲಭ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಸಮಪರ್ಕವಾಗಿ ಜನರಿಗೆ ತಲುಪಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಗ್ರಾಮ ಮಟ್ಟದಲ್ಲಿ ವಾರ್ಡ್ವಾರು ಸಭೆಗಳನ್ನು ನಡೆಸಿ ಸ್ಥಳೀಯ ಗ್ರಾಮಾಭಿವೃದ್ಧಿ ಹಾಗೂ ಆರ್ಥಿಕ ಪ್ರಗತಿ ಹೆಚ್ಚಿಸಲು ಯೋಜನೆಗಳನ್ನು ರೂಪಿಸಬೇಕು. ಕುಡಿಯುವ ನೀರಿನ ಪೂರೈಕೆ, ಅನುಧಾನಗಳ ಸಮರ್ಪಕ ಬಳಕೆ ಬಗ್ಗೆ ಸಮರ್ಪಕ ಕ್ರಿಯಾಯೋಜನೆ ರೂಪಿಸಿ ಜನರಿಗೆ ಅನುಕೂಲವಾಗುವಂತಹ ಕಾಮಗಾರಿಗಳನ್ನು ಹಮ್ಮಿಕೊಳ್ಳಬೇಕು. ಹಾಗೂ ಜನರಿಗೆ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ವಿಕೇಂದ್ರೀಕೃತ ತರಬೇತಿ ಸಂಯೋಜಕ ಸಿ.ಮಂಜುನಾಥ್ ಮಾತನಾಡಿ, ‘ಮಹಿಳೆಯರು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ನಡೆಯುವ ಗ್ರಾಮಸಭೆ, ವಾರ್ಡ್ವಾರು ಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಪ್ರತಿಯೊಂದು ಕುಟುಂಬವು ಶೌಚಾಲಯಗಳನ್ನು ನಿರ್ಮಿಸಿಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿಸಬೇಕಿದೆ. ಶೇ 30ರಷ್ಟು ಮಹಿಳೆಯರು ಗ್ರಾಮ ಸಭೆಯಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.