ಆನೇಕಲ್: ‘ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಈಗ ಕರ್ನಾಟಕದ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆ, ಉದ್ಯಮ.. ಹೀಗೆ ಯಾವುದೇ ಅಧಿಕೃತ ಸಂಸ್ಥೆಗಳಲ್ಲಿ ಕೆಲಸಕ್ಕೆ ಸೇರಲು ಕನ್ನಡವನ್ನು ಒಂದು ಭಾಷೆಯಾಗಿ ಕಲಿತಿರುವುದು ಕಡ್ಡಾಯವಾಗಬೇಕು’ ಎಂದು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸಾ.ರಾ.ಗೋವಿಂದು ಪ್ರತಿಪಾದಿಸಿದರು. ಚಂದಾಪುರದಲ್ಲಿ ಭಾನುವಾರ ನಡೆದ ಬೆಂಗಳೂರು ನಗರ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.