ಧಾರವಾಡ: ರೈತರ ಸಾಲ ಮನ್ನಾ, ಪ್ರಸಕ್ತ ಸಾಲಿನ ಹಿಂಗಾರು ಬೆಳೆ ಪರಿಹಾರ ಬಿಡುಗಡೆ, ಮಹದಾಯಿ, ಕಳಸಾ ಬಂಡೂರಿ ಯೇಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವಲಗುಂದ ತಾಲ್ಲೂಕಿನ ಶಿರೂರ ಗ್ರಾಮದ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಗ್ರಾಮದ ರೈತ ಮುಖಂಡ ಮಲ್ಲಿಕಾರ್ಜುನ ಬಾಳಗೌಡರ ಮಾತನಾಡಿ, ‘ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ₹10 ಲಕ್ಷದ ವರೆಗೆ ಶೇ 1ರಷ್ಟು ಬಡ್ಡಿಯಲ್ಲಿ ಸಾಲ ಕೊಡುವ ಯೋಜನೆ ಜಾರಿಗೆ ತರಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಂಟಿಯಾಗಿ ರಾಷ್ಟ್ರೀಕೃತ ಬ್ಯಾಂಕ್ನಲ್ಲಿರುವ ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು. ಜತೆಗೆ ಕಳಸಾ ಬಂಡೂರಿ ಯೋಜನೆ ಅನುಷ್ಠಾನಗೊಳಿಸಿಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದರು.