ಕೋಲಾರ: ‘ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಎರಡು ತಿಂಗಳಲ್ಲೇ ಪೊಲೀಸ್ ಗೋಲಿಬಾರ್ ಮಾಡಿಸಿ ಇಬ್ಬರು ರೈತರನ್ನು ಕೊಲ್ಲಿಸಿದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಜಿಲ್ಲೆಯ ಶ್ರೀನಿವಾಸಪುರದಲ್ಲಿ ಶನಿವಾರ ಸಾಧನಾ ಸಮಾವೇಶದಲ್ಲಿ ಮಾತನಾಡಿ, ಯಡಿಯೂರಪ್ಪ ಅವರದು ಎರಡು ನಾಲಿಗೆ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೃಷಿ ಸಾಲ ಮನ್ನಾ ಮಾಡದ ಅವರು ಈಗ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಎತ್ತಿನಹೊಳೆ ಯೋಜನೆ ಸ್ಥಗಿತಗೊಳಿಸುವುದಾಗಿ ಹೇಳಿರುವ ಎಚ್.ಡಿ. ಕುಮಾರಸ್ವಾಮಿ ಬಯಲುಸೀಮೆ ಭಾಗದ ಜನರ ವಿರೋಧಿ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಭಾಗದ ಜನರಿಗೆ ನೀರು ಕೊಡುವ ಪ್ರಯತ್ನ ಮಾಡಲಿಲ್ಲ. ಅವರದು ಜನಪರ ರಾಜಕಾರಣವಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.