ಬೆಂಗಳೂರು: ಪ್ರಶಸ್ತಿ ವಿಜೇತ ‘ಕ್ವೀನ್ ಲತೀಫಾ’ ರೇಸ್ ಕುದುರೆಗೆ ಉದ್ದೀಪನ ಮದ್ದು ನೀಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
‘ಈ ಪ್ರಕರಣದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಲು ಬಯಸುವುದಿಲ್ಲ. ಸಿಐಡಿ ಪೊಲೀಸರು ತಮ್ಮ ತನಿಖೆ ಪೂರ್ಣಗೊಳಿಸಿ ವರದಿ ನೀಡಲಿ’ ಎಂದು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.
‘ನಮ್ಮ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು. ಈಗ ನಡೆಸುತ್ತಿರುವ ತನಿಖೆಗೆ ತಡೆ ನೀಡಬೇಕು’ ಎಂದು ಕೋರಿ ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಯೂ ಆದ ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘದ ಸದಸ್ಯ ಎಚ್.ಚಂದ್ರೇಗೌಡ ಅವರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.
‘ಕ್ವೀನ್ ಲತೀಫಾಗೆ ಕೆಟಗರಿ–3 ಮದ್ದು ನೀಡಿದ್ದರಿಂದಲೇ ನಿರ್ದಿಷ್ಟ ರೇಸ್ನಲ್ಲಿ ಗೆದ್ದಿದೆ’ ಎಂದು ಆರೋಪಿಸಿ ಚಂದ್ರೇಗೌಡ 2017ರ ಏಪ್ರಿಲ್ ಮೂರನೇ ವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.