ಬಳ್ಳಾರಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇದೇ 27ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
ಜಿಲ್ಲೆಯ ಹೊಸಪೇಟೆಯಲ್ಲಿ 27ರಂದು ಪರಿಶಿಷ್ಟ ಪಂಗಡದ ಸಮಾವೇಶ ಆಯೋಜಿಸಿದ್ದು, ಅದನ್ನು ಅವರು ಉದ್ಘಾಟಿಸಲಿದ್ದಾರೆ ಎಂದು ಸಚಿವ ರಮೇಶ ಜಾರಕಿಹೊಳಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಸಮಾವೇಶದಲ್ಲಿ 5 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ಅವರು ತಿಳಿಸಿದರು.
‘28ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ವಿದುರಾಶ್ವತ್ಥದಲ್ಲಿ ರೈತರೊಂದಿಗೆ, ಮೈಸೂರಿನಲ್ಲಿ ವಿದ್ಯಾರ್ಥಿಗಳೊಂದಿಗೆ ಹಾಗೂ ಚಿಂತಕರೊಂದಿಗೆ ಸಂವಾದ ನಡೆಸಲಿದ್ದಾರೆ. 29ರಂದು ಬೆಂಗಳೂರಿನ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಅವರು ವಿವರಿಸಿದರು.
‘ಓಬಳಾಪುರ ಗಣಿ ಗಡಿ ಒತ್ತುವರಿ ವಿವಾದವನ್ನು ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ತಿಳಿಸಿದರು.
2008ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಉಗ್ರಪ್ಪ ಅವರು, ಗಣಿ ಗಡಿ ಒತ್ತುವರಿ ಸತ್ಯಶೋಧನಾ ಸಮಿತಿಯ ಅಧ್ಯಕ್ಷರಾಗಿ ಜಿಲ್ಲೆಗೆ ಭೇಟಿ ನೀಡಿ ವರದಿಯನ್ನು ಸಲ್ಲಿಸಿದ್ದರು.