ಬೆಂಗಳೂರು: ಕೇಂದ್ರ ಸರ್ಕಾರ ಎಲ್ಲ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಿರುವುದನ್ನು ಖಂಡಿಸಿ, ಆಹಾರ ಹಕ್ಕಿಗಾಗಿ ಜನಾಂದೋಲನ ಸಂಘಟನೆ ವತಿಯಿಂದ ಇದೇ 12ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಯ ಮುಖಂಡ ಕ್ಷಿತಿಜ್ ಅರಸ್ ತಿಳಿಸಿದರು.
ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವ್ಯವಸ್ಥೆಯಲ್ಲಿ ದಕ್ಷತೆ ಹಾಗೂ ಆಧುನಿಕತೆಯನ್ನು ತರುವ ಸಲುವಾಗಿ ಜನರ ವೈಯಕ್ತಿಕ ಮಾಹಿತಿಯನ್ನು ಯಾಂತ್ರೀಕರಣ ಮಾಡುವುದು ಅತ್ಯಂತ ಅಪಾಯಕಾರಿ. ಇದರ ದುರುಪಯೋಗದಿಂದ ಎದುರಾಗುವ ಹಾನಿಗೆ ಎಲ್ಲರೂ ಬಲಿಯಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.
‘ಆಧಾರ್ ಕಡ್ಡಾಯ ಮಾಡಿರುವುದರಿಂದ ಹಲವು ಯೋಜನೆಗಳ ಲಾಭ ಪಡೆದುಕೊಳ್ಳಲು ಫಲಾನುಭವಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೇ 17ರಂದು ನಡೆಯಲಿದೆ’ ಎಂದು ವಕೀಲೆ ದರ್ಶನ ತಿಳಿಸಿದರು.