ಮಂಗಳೂರು: ‘ಮೂಲವಿಜ್ಞಾನವೇ ಎಲ್ಲ ಆವಿಷ್ಕಾರಗಳಿಗೆ ಬುನಾದಿಯಾಗಿದ್ದು, ಮೂಲ ವಿಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆ ಇದೆ’ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಭೌತವಿಜ್ಞಾನಿ ಸರ್ಜ್ ಹೊರಾಕೆ ಹೇಳಿದರು.
ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಶುಕ್ರವಾರ ಆರಂಭವಾದ ವಿಜ್ಞಾನ, ತಂತ್ರಜ್ಞಾನ ಮತ್ತು ಉದ್ಯಮಾಡಳಿತ ಕುರಿತಾದ ಸಹ್ಯಾದ್ರಿ ಸಮ್ಮೇಳನದಲ್ಲಿ ಅವರು ಮಾತನಾಡಿದರು.
‘ಪ್ರಸಕ್ತ ಸ್ಥಿತಿಯಲ್ಲಿ ಭಾರತವೂ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಮೂಲವಿಜ್ಞಾನದತ್ತ ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ ಅನೇಕ ಪ್ರತಿಭೆಗಳು ವಿಜ್ಞಾನದಿಂದ ವಿಮುಖವಾಗುತ್ತಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ, ರಾಜಕಾರಣಿಗಳು ಗಮನ ನೀಡಬೇಕು’ ಎಂದು ಸಲಹೆ ನೀಡಿದರು.