ಹರಿದ್ವಾರ: ತೀವ್ರ ಚಳಿಯಿಂದ ತತ್ತರಿಸಿರುವ ಈಶಾನ್ಯ ರಾಜ್ಯಗಳಲ್ಲಿ ನಿರಾಶ್ರಿತರ ಸಾವಿನ ಪ್ರಮಾಣ ಏರಿಕೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಹರಿದ್ವಾರ ಪೊಲೀಸರು, ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುವವರನ್ನು ಬಂಧಿಸಿ ಜೈಲಿಗೆ ಹಾಕಲು ನಿರ್ಧರಿಸಿದ್ದಾರೆ.
ಚಳಿಯಿಂದ ರಕ್ಷಿಸುವ ಸಲುವಾಗಿ ಭಿಕ್ಷುಕರನ್ನು ಬಂಧಿಸುವಂತೆ ಹಿರಿಯ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶಿಸಿದ್ದಾರೆ.
ಇದೇ ಮೊದಲ ಬಾರಿಗೆ ಭಿಕ್ಷಾಟನೆ ಮಾಡುತ್ತಿದ್ದ ಮಹಿಳೆಯನ್ನೂ ಬಂಧಿಸಲಾಗಿದೆ ಎನ್ನಲಾಗಿದೆ.
ಕೆಲದಿನಗಳ ಹಿಂದೆ ತೀವ್ರ ಚಳಿಯಿಂದಾಗಿ ಮೂವರು ಅಪರಿಚಿತರು ಮೃತಪಟ್ಟಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹರಿದ್ವಾರ ಜಿಲ್ಲಾಡಳಿತ ನಿರಾಶ್ರಿತರನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದೆ.
ಅಧಿಕಾರಿಗಳು ನಿರಾಶ್ರಿತರ ಪ್ರಾಣ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಮುಂಬರುವ ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.