ಹೊನ್ನಾವರ: ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣ ದೊರಕುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೇಟು ಹಾಕುವ ಅಗತ್ಯವಿಲ್ಲ’ ಎಂದು ಶಾಸಕ ಮಂಕಾಳ ವೈದ್ಯ ಹೇಳಿದರು.
ಮುಗುಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸ್ಮೇಳನದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ‘ಶಾಲೆಗಳ ಸ್ಥಿತಿ– ಗತಿ ಊರಿನ ಅಭಿವೃದ್ಧಿಯ ಪ್ರತೀಕ’ ಎಂದರು.
ತಾಲ್ಲೂಕು ಪಂಚಾಯ್ತಿ ಸದಸ್ಯ ಗಣಪಯ್ಯ ಗೌಡ ಮಾತನಾಡಿ, ‘ಶಾಲಾ ವಾರ್ಷಿಕೋತ್ಸವ ಸೇರಿದಂತೆ ಊರಿನಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿ ಜನರು ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸದ ಸಂಗತಿ’ ಎಂದು ಹೇಳಿದರು.
ಕಳೆದ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಗಳಿಸಿದ ಸ್ಥಳೀಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಮುಖರಾದ ದೇವಿ ಗೌಡ, ಸುರೇಶ ನಾಯ್ಕ, ಎಂ.ಎನ್.ಗೌಡ, ಚಂದ್ರಶೇಖರ ಗೌಡ, ವಾಸುದೇವ ನಾಯ್ಕ, ಗಂಗಾಧರ ಗೌಡ ಇದ್ದರು.