ಮಡಿಕೇರಿ: ‘ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಹೆಚ್ಚು ಸ್ಥಾನಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ನಿಶ್ಚಿತ’ ಎಂದು ಜೆಡಿಎಸ್ ಮುಖಂಡ ಬಿ.ಎ.ಜೀವಿಜಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ನೀಡಿರುವ ಯೋಜನೆಗಳನ್ನು ರಾಜ್ಯದ ಜನತೆ ಮೆಚ್ಚಿಕೊಂಡಿದ್ದಾರೆ. ಮತ್ತೊಮ್ಮೆ ಕುಮಾರಸ್ವಾಮಿ ಅವರಿಗೆ ಆಶೀರ್ವಾದ ಮಾಡುವ ಭರವಸೆ ಇದೆ’ ಎಂದು ತಿಳಿಸಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಆಡಳಿತ ವೈಖರಿಯಿಂದ ರೈತರು ಸೇರಿದಂತೆ ಜನತೆ ಬೇಸತ್ತಿದ್ದಾರೆ. ಭ್ರಷ್ಟಾಚಾರ ವ್ಯಾಪಕವಾಗಿದೆ. ನಡೆಯುತ್ತಿದ್ದು, ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳತ್ತ ಜನರು ಒಲವು ತೋರುತ್ತಿದ್ದಾರೆ ಎಂದು ಜೀವಿಜಯ ಹೇಳಿದರು.
ಮುಖಂಡರ ನಿರ್ಧಾರಕ್ಕೆ ಬದ್ಧ: ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಲಿದ್ದು, ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ರಾಜ್ಯ ಮುಖಂಡರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದರು.
ಜೆಡಿಎಸ್ ಘಟಕದ ರಾಜ್ಯ ಕಾರ್ಯಾಧ್ಯಕ್ಷ ಬಿ.ಎಚ್.ಚಂದ್ರಶೇಖರ್ ಅವರು, ‘ಜಿಲ್ಲೆಯಲ್ಲಿ ಜ.25ರಂದು ಪಕ್ಷದ ಸಮಾವೇಶ ನಡೆಯಲಿದ್ದು, ಶಾಸಕ ಮಧು ಬಂಗಾರಪ್ಪ ಭೇಟಿ ಆಗಮಿಸುವರು’ ಎಂದು ತಿಳಿಸಿದರು.
ವಿರಾಜಪೇಟೆ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಸ್ಥಾನೀಯ ಸಮಿತಿ, ಹೋಬಳಿ ಘಟಕದ ಅಧ್ಯಕ್ಷರ ಆಯ್ಕೆ ಕುರಿತು ಚರ್ಚೆಗಳು ನಡೆಯಲಿವೆ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಜಾರಿಗೊಳಿಸಿದ ಯೋಜನೆಗಳ ಮಾಹಿತಿಗಳನ್ನು ಮನೆ–ಮನೆಗೆ ತಲುಪಿಸಲು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಜಾತಿವಾರು ಮತ ಒಗ್ಗೂಡಿಸಲು ಒತ್ತು ನೀಡುತ್ತಿದ್ದು, ಕೋಮು ಸಂಘರ್ಷಗಳಿಗೆ ಇದೂ ಕಾರಣವಾಗಿವೆ ಎಂದು ಚಂದ್ರಶೇಖರ್ ದೂರಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಕೇತ್ ಪೂವಯ್ಯ, ‘ಕಾರ್ಯಕರ್ತರು ಪಕ್ಷದ ಸಂಘಟನೆಯಲ್ಲಿ ಹೆಚ್ಚು ತೊಡಗಬೇಕು. ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ರಾಷ್ಟ್ರೀಯ ಪಕ್ಷಗಳು ಜಿಲ್ಲೆಯ ಜನರ ವಿಶ್ವಾಸ ಕಳೆದುಕೊಂಡಿವೆ’ ಎಂದು ವ್ಯಾಖ್ಯಾನಿಸಿದರು.
ಪಕ್ಷ ಕಳೆದ ಬಾರಿ ಅತ್ಯಂತ ಕಡಿಮೆ ಅಂತರದಲ್ಲಿ ಸೋತಿದೆ. ಈ ಬಾರಿ ಹೆಚ್ಚು ಮತಗಳನ್ನು ಪಡೆಯುವಲ್ಲಿ ಜೆಡಿಎಸ್ ಪಕ್ಷ ಜಿಲ್ಲೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲಿದೆ’ ಎಂದು ಹೇಳಿದರು. ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಿ.ಎಲ್. ವಿಶ್ವ, ಪಕ್ಷದ ಮಖಂಡ ಮನೋಜ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.