ಮೈಸೂರು: ‘ಈ ಬಾರಿಯ ಎಸ್ಎಸ್ಎಲ್ಸಿ ಹಾಗೂ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶಗಳನ್ನು ಏಪ್ರಿಲ್ 30ರೊಳಗಾಗಿ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.
‘ಕರ್ನಾಟಕ ಸುರಕ್ಷಿತ ಪರೀಕ್ಷಾ ವ್ಯವಸ್ಥೆ (ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಂ)ಯನ್ನು ಅಳವಡಿಸಿಕೊಳ್ಳಲಾಗಿದೆ. ಕಳೆದ ಸಲದ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಲಾಗಿದೆ. ಮೌಲ್ಯಮಾಪನಕ್ಕೆ ತಕರಾರಿಲ್ಲದೆ ಸಹಕರಿಸುವುದಾಗಿ ಶಿಕ್ಷಕರೂ ತಿಳಿಸಿದ್ದಾರೆ’ ಎಂದು ಸೋಮವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.
‘ಕಳೆದ ವರ್ಷ ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಇರಲಿಲ್ಲ ಎಂಬ ಮಾಹಿತಿ ಬಂದಿತ್ತು. ಕೆಲವೆಡೆ ಗೊಂದಲ ಉಂಟಾಗಿತ್ತು. ಈ ಬಾರಿ ಎಲ್ಲಾ 788 ಪರೀಕ್ಷಾ ಕೇಂದ್ರಗಳಲ್ಲೂ ಕ್ಯಾಮೆರಾ ಅಳವಡಿಸಲಾಗುವುದು. ಯಾವುದೇ ಭಯ, ಹಿಂಜರಿಕೆ ಇಲ್ಲದೆ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬಹುದು’ ಎಂದರು.