ಘಟನೆ ವಿವರ: ಸೋಮವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ ಎಸ್.ಮೋಳೆ (23) ಮತ್ತು ಅನಿಲ ರೇಣುಕೆ (23) ಅವರನ್ನು ಆಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅವರನ್ನು ಪರೀಕ್ಷಿಸಿದ್ದ ವೈದ್ಯರು ಇಬ್ಬರೂ ಮೃತಪಟ್ಟಿರುವುದಾಗಿ ಖಚಿತ ಪಡಿಸಿದ ಬಳಿಕ, ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು.
‘ಆದರೆ, ಸೋಮವಾರ ಬೆಳಿಗ್ಗೆ 10ಕ್ಕೆ ಶವ ಪರೀಕ್ಷೆಗೆ ಮುಂದಾದಾಗ ಮಗನ ಹೃದಯ ಬಡಿಯುತ್ತಿತ್ತು. ಈ ವಿಷಯವನ್ನು ಗಮನಕ್ಕೆ ತಂದರೂ ಆಸ್ಪತ್ರೆ ವೈದ್ಯರು ಸ್ಪಂದಿಸಲಿಲ್ಲ. ತಕ್ಷಣವೇ ಮಗನನ್ನು ‘ಲೈಫ್ಲೈನ್’ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆತ ಒಂದು ತಾಸಿನ ಹಿಂದೆಯಷ್ಟೇ ಮೃತಪಟ್ಟಿದ್ದಾಗಿ ಅಲ್ಲಿನ ವೈದ್ಯರು ತಿಳಿಸಿದರು’ ಎಂದು ಪ್ರವೀಣ್ ತಂದೆ ಸುಭಾಷ್ ಮೋಳೆ ದುಃಖಿಸಿದರು.