ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಜಿಲ್ಲೆಯಲ್ಲಿ ಜ.11ರಂದು ನಡೆಯಲಿದ್ದು, ಸುಮಾರು ₹ 900 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ.
ಅಂದು ಎಚ್.ಡಿ.ಕೋಟೆ, ವರುಣಾ, ನಂಜನಗೂಡು, ತಿ.ನರಸೀಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮುಗಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ, ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜ.12ರಂದು ಮೈಸೂರು ನಗರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸುವರು.
‘ಜಿಲ್ಲೆಯಲ್ಲಿ ಇದುವರೆಗೆ ಆಗಿರುವ ಸಾಧನೆಗಳ ಬಗ್ಗೆ ಪುಸ್ತಕ ಹೊರತರಲಾಗುವುದು. ಅಲ್ಲದೆ, ತಾಲ್ಲೂಕುವಾರು ಪ್ರಗತಿ ಕುರಿತು ಕೈಪಿಡಿ ಬಿಡುಗಡೆ ಮಾಡಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
ತಾವು ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ನಿರ್ಮಿಸಿರುವ ವಿದ್ಯಾರ್ಥಿನಿಯರ ನಿಲಯಕ್ಕೆ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಲ್ಲದೆ, ₹ 35 ಕೋಟಿಗೂ ಅಧಿಕ ಹಣದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಹಾಗೂ ಇತರ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೊದಲು ಸರಗೂರಿನಲ್ಲಿ: ಹೊಸದಾಗಿ ಘೋಷಣೆಯಾಗಿರುವ ಸರಗೂರು ತಾಲ್ಲೂಕು ಕೇಂದ್ರದಲ್ಲಿ ಅಂದು ಬೆಳಿಗ್ಗೆ ಸಮಾವೇಶ ಆಯೋಜಿಸಲಾಗಿದೆ.
* *
4 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 3 ತಾಲ್ಲೂಕುಗಳಲ್ಲಿ ಸಾಧನಾ ಸಮಾವೇಶ ನಡೆಯಲಿದೆ. ಸಮಾವೇಶ ಯಶಸ್ಸಿಗೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ ಟಿ.ಯೋಗೇಶ್ ಹೆಚ್ಚುವರಿ ಜಿಲ್ಲಾಧಿಕಾರಿ, ಮೈಸೂರು