ಚನ್ನಗಿರಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಉಚಿತ ಲ್ಯಾಪ್ಟಾಪ್ ವಿತರಿಸುತ್ತಿದೆ. ಮುಂದೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಶಾಸಕ ವಡ್ನಾಳ್ ರಾಜಣ್ಣ ತಿಳಿಸಿದರು.
ಪಟ್ಟಣದ ಶಿವಲಿಂಗೇಶ್ವರಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಪರಿಶಿಷ್ಟ ಜಾತಿ ಮತ್ತು ಪಂಡಗದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದರು.
ಕಾಲೇಜಿನ 119 ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲಾಗಿದೆ. ಸರ್ಕಾರ ನೀಡಿರುವ ಲ್ಯಾಪ್ಟಾಪ್ಗಳನ್ನು ಸದ್ಬಳಕೆ ಮಾಡಿಕೊಂಡು, ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳುವ ಮೂಲಕ ಉನ್ನತ ಶಿಕ್ಷಣ ಪಡೆದುಕೊಂಡು ಪೋಷಕರಿಗೆ ಹಾಗೂ ಕಾಲೇಜಿಗೆ ಕೀರ್ತಿ ತರುವಂತವರಾಗಬೇಕು.
ಈ ಕಾಲೇಜಿನಲ್ಲಿ 2 ಕೊಠಡಿಗಳನ್ನು ನಿರ್ಮಿಸಲು ₹ 20 ಲಕ್ಷ ಅನುದಾನವನ್ನು ಶೀಘ್ರದಲ್ಲಿಯೇ ನೀಡಲಾಗುವುದು. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತರಲಾಗಿದೆ. ಕ್ಷೇತ್ರದ 218 ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಲಾಗಿದೆ. ಪಟ್ಟಣದಲ್ಲಿ 11 ಘಟಕಗಳನ್ನು ತೆರೆಯಲಾಗುತ್ತಿದೆ ಎಂದರು.
ಹಿರಿಯ ಉಪನ್ಯಾಸಕ ಎ. ಮಧ್ವಾಚಾರ್, ಉಪನ್ಯಾಸಕರಾದ ಡಾ.ಬಿ. ಆನಂದ್, ಅಬ್ದುಲ್ ರೆಹಮಾನ್, ಶಿವಣ್ಣ, ಷಣ್ಮುಖ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಬಿ.ವಿ. ವೀರಪ್ಪ ಅಧ್ಯಕ್ಷತೆ ವಹಿಸಿದ್ದರು.