ಬೆಂಗಳೂರು: ಹತ್ಯೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಕೆಲವು ಸಂಘಟನೆಗಳನ್ನು ನಿಷೇಧಿಸುವುದಾದರೆ ಆರ್ಎಸ್ಎಸ್, ಬಿಜೆಪಿ, ಬಜರಂಗದಳಗಳನ್ನೂ ನಿಷೇಧ ಮಾಡಬೇಕಾಗುತ್ತದೆ. ಅವರೂ ಜಿಹಾದಿಗಳೇ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
‘ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆಗೆ ಕಾರಣರಾಗಿರುವ ಬಿಜೆಪಿ, ಬಜರಂಗದಳದ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ಕಾಂಗ್ರೆಸ್ನ ವಿದ್ಯಾರ್ಥಿ ಘಟಕ ಎನ್ಎಸ್ಯುಐ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ದೀಪಕ್ ರಾವ್, ಪ್ರವೀಣ ಪೂಜಾರಿ ಹತ್ಯೆ ಬಗ್ಗೆ ಮಾತನಾಡುವ ಬಿಜೆಪಿಯವರು ಧನ್ಯಶ್ರೀ ಆತ್ಮಹತ್ಯೆ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಧನ್ಯಶ್ರೀ ಕೂಡ ಹಿಂದೂ ಅಲ್ಲವೇ ಎಂದು ಪ್ರಶ್ನಿಸಿದ ದಿನೇಶ್, ಈ ಘಟನೆಯ ಹಿಂದೆ ಬಜರಂಗದಳದವರು ಇರುವುದರಿಂದ ಬಿಜೆಪಿಯವರು ಚಕಾರ ಎತ್ತುತ್ತಿಲ್ಲ ಎಂದು ಹರಿಹಾಯ್ದರು.
ಸೋಶಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಬಿಜೆಪಿಯವರು
ಒತ್ತಾಯಿಸುತ್ತಿದ್ದಾರೆ. ಹತ್ಯೆಯಲ್ಲಿ ಭಾಗಿಯಾಗಿರುವ ಆ ಸಂಘಟನೆಗಳನ್ನೂ ನಿಷೇಧಿಸಬೇಕಾಗುತ್ತದೆ. ಅದೇ ನಿಯಮ ಆರ್ಎಸ್ಎಸ್, ಬಿಜೆಪಿಗೂ ಅನ್ವಯವಾಗುತ್ತದೆ ಎಂದು ಅವರು ಹೇಳಿದರು.
ಚಾಮರಾಜನಗರ: ‘ಆರ್ಎಸ್ಎಸ್, ಬಜರಂಗ ದಳದವರೇ ಉಗ್ರಗಾಮಿಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಟೀಕಿಸಿದರು.
ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ತಾಲ್ಲೂಕಿನ ನಾಗವಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಬಿಜೆಪಿ ಒತ್ತಾಯಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಪಿಎಫ್ಐ, ಎಸ್ಡಿಪಿಐ, ಆರ್ಎಸ್ಎಸ್, ಬಜರಂಗದಳ, ವಿಎಚ್ಪಿ ಯಾವುದೇ ಸಂಘಟನೆಯಾದರೂ ಸಾಮರಸ್ಯ ಕದಡುವುದು, ಕೋಮುವಾದಕ್ಕೆ ಪ್ರಚೋದನೆ ನೀಡುವುದನ್ನು ಸಹಿಸುವುದಿಲ್ಲ ಎಂದು ಹೇಳಿದರು.