ಕಲಬುರ್ಗಿ: ಮದ್ಯ ಸೇವನೆಗೆ ಹಣ ಕೊಡಲು ನಿರಾಕರಿಸಿದ ತಾಯಿ ಮತ್ತು ಅಕ್ಕನನ್ನು ಕೊಲೆ ಮಾಡಿದ್ದ ಆರೋಪಿ ಆನಂದ ಹಣಮಂತ ಗಾಡಿವಡ್ಡರಗೆ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಈಚೆಗೆ ತೀರ್ಪು ನೀಡಿದೆ.
ಇಲ್ಲಿಯ ವಡ್ಡರಗಲ್ಲಿಯ ನಿವಾಸಿ ಆನಂದ 2016ರಲ್ಲಿ ತಾಯಿ ಮತ್ತು ಅಕ್ಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡ ಅಶೋಕ ನಗರ ಠಾಣೆ ಪೊಲೀಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಎಸ್.ನಾಯಕ್ ಅವರು ಜೀವಾವಧಿ ಶಿಕ್ಷೆ ಮತ್ತು ₹25ಸಾವಿರ ದಂಡ ವಿಧಿಸಿ ತೀರ್ಪು ನೀಡಿದರು.
ಸರ್ಕಾರಿ ಅಭಿಯೋಜಕ ಬಲಭೀಮ ಮದನಸೂರೆ ಸರ್ಕಾರದ ಪರ ವಾದ ಮಂಡಿಸಿದ್ದರು.