ಸೋಮವಾರಪೇಟೆ (ಕೊಡಗು ಜಿಲ್ಲೆ): ‘ಮಹದಾಯಿ ನದಿ ವಿವಾದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಡುಕಿನ ನಿರ್ಧಾರ ಕೈಗೊಂಡಿದ್ದರಿಂದ ಸಮಸ್ಯೆ ಇತ್ಯರ್ಥವಾಗಲು ಸಾಧ್ಯವಾಗಲಿಲ್ಲ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಲ್ಲಿ ಸೋಮವಾರ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಅವರು ಸರ್ವ ಪಕ್ಷಗಳ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳಬಹುದಿತ್ತು. ಆದರೆ, ಅವರ ದುಡುಕಿನ ನಿರ್ಧಾರ ಎಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ’ ಎಂದು ಹೇಳಿದರು.
ಮಹದಾಯಿ ವಿವಾದ ಇತ್ಯರ್ಥವಾಗದಿದ್ದರೆ, ಉತ್ತರ ಕರ್ನಾಟಕ ಭಾಗದ ಜನರು ಪ್ರತ್ಯೇಕ ರಾಜಕೀಯ ಪಕ್ಷ ಕಟ್ಟುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ ‘ಪ್ರತ್ಯೇಕ ಪಕ್ಷ ಕಟ್ಟುವುದು ಅವರ ವೈಯಕ್ತಿಕ ನಿರ್ಧಾರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮುಕ್ತ ಅವಕಾಶವಿದೆ’ ಎಂದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚುನಾವಣೆ ಸಂದರ್ಭ ದೇವಸ್ಥಾನಗಳಿಗೆ ಹೋಗುವ ನಿರ್ಧಾರ ಕೈಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ವ್ಯಂಗ್ಯವಾಡಿದರು. ‘ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೆಲಸ ಮಾಡುತ್ತಿದ್ದು, ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ಲ’ ಎಂದರು.