ಹೊಸಕೋಟೆ: ‘ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಮಾಡುವ ಮೊದಲ ಕೆಲಸ ಎಂದರೆ, ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.
ಹೊಸಕೋಟೆಯ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಿಜೆಪಿ ಪಕ್ಷದ ಪರಿವರ್ತನಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
‘ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಕೇವಲ ಮತ ಬ್ಯಾಂಕ್ ಆಗಿ ಪರಿಗಣಿಸಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರಿಗಾಗಿ ಕೃಷಿ ಬಜೆಟ್
ಅನ್ನು ಮಂಡಿಸಿತ್ತು. ಗ್ರಾಮೀಣ ಅಭಿವೃದ್ಧಿಗೆ ಸುವರ್ಣ ಗ್ರಾಮ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಹಮ್ಮಿ
ಕೊಂಡಿದ್ದೆವು. ಅವೆಲ್ಲವನ್ನು ಸ್ಥಗಿತಗೊಳಿಸಲಾಗಿದೆ’ ಎಂದು ದೂರಿದರು.
‘ಕಾಂಗ್ರೆಸ್ ಮುಕ್ತ ಕರ್ನಾಟಕವನ್ನಾಗಿಸಲು ಬೂತ್ ಮಟ್ಟದ ಸಮಿತಿಗಳನ್ನು ಬಲಪಡಿಸಿ, ಗೆಲುವಿಗೆ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು’ ಎಂದರು.
ಕೇಂದ್ರ ಸಚಿವ ಅನಂತಕುಮಾರ್, ‘ಹಿಂದುಳಿದ ವರ್ಗದ ಆಯೋಗಕ್ಕೆ ಸಂವಿಧಾನಾತ್ಮಕ ಸ್ಥಾನ ನೀಡಿರುವುದಕ್ಕೆ ಹಾಗೂ ತ್ರಿವಳಿ ತಲಾಕ್ ನಿಷೇಧಿಸಿರುವುದಕ್ಕೆ ಕಾಂಗ್ರೆಸ್ ಕ್ಯಾತೆ ತೆಗೆಯುತ್ತಿರುವುದು ನೋಡಿದರೆ, ಅಲ್ಪ ಸಂಖ್ಯಾತರ ಮೇಲೆ ಅವರಿಗಿರುವ ಧೋರಣೆ ತಿಳಿಯುತ್ತದೆ’ ಎಂದರು.
ಶಾಸಕ ಆರ್.ಅಶೋಕ್, ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜತೆಗೆಸರ್ಕಾರ ಜಾತಿಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಜನರು ನೆಮ್ಮದಿಯಾಗಿ ಬದುಕಲು ಆಗುತ್ತಿಲ್ಲ’ ಎಂದು ಹೇಳಿದರು.