ಮದ್ದೂರು: ಗೋವಾದ ನೀರಾವರಿ ಸಚಿವ ಪಾಲೇಕಾರ್ ಕನ್ನಡಿಗರ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು.
ಬೆಂಗಳೂರು ಮೈಸೂರು ಹೆದ್ದಾರಿ ತಡೆದ ಕಾರ್ಯಕರ್ತರು ಪಾಲೇಕಾರ್ ಅವರ ಪ್ರತಿಕೃತಿಯನ್ನು ದಹಿಸಿದರು. ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಗೋವಾ ಮುಖ್ಯಮಂತ್ರಿ ಪರ್ರೀಕರ್ ಮತ್ತು ಸಚಿವ ಪಾಲೇಕರ್ ರಾಜ್ಯದ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಚುರುಕಾಗಲಿದೆ ಎಂದು ಎಚ್ಚರಿಕೆ ನೀಡಿದರು.
ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ಸಿ.ಉಮಾಶಂಕರ್, ಪದಾಧಿಕಾರಿಗಳಾದ ಕಾಳೀರಯ್ಯ, ಸ್ವಾಮಿ, ಹೇಮಕುಮಾರ್, ಮಂಜು, ಯಾಕೂಬ್, ಮಲ್ಲರಾಜು, ಗುಂಡಮಹೇಶ್, ಲಕ್ಷ್ಮಣಗೌಡ, ರಮೇಶ್, ಶಿವಣ್ಣ, ಶೇಖರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.