ನವದೆಹಲಿ: ವಿವಿಧ ರಾಜ್ಯಗಳಲ್ಲಿ ‘ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ ಕ್ರಮ ಪ್ರಶ್ನಿಸಿ ಸಿನಿಮಾ ನಿರ್ಮಾಪಕರು ಸಲ್ಲಿಸಿದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ಸಮ್ಮತಿಸಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ್ ಅವರಿರುವ ಪೀಠ ಅರ್ಜಿಯ ತ್ವರಿತ ವಿಚಾರಣೆಗೆ ಒಪ್ಪಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಜಸ್ಥಾನ, ಹರಿಯಾಣ, ಗುಜರಾತ್, ಮಧ್ಯಪ್ರದೇಶಗಳಲ್ಲಿ ‘ಪದ್ಮಾವತ್’ ಚಿತ್ರಕ್ಕೆ ನಿಷೇಧ ಹೇರಲಾಗಿದೆ. ಇದೇ 25ರಂದು ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.