ಬೆಂಗಳೂರು: ‘ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಪದೇ ಪದೇ ಶಾಂತಿ ಕದಡುವ ಹೇಳಿಕೆ ನೀಡುತ್ತಿದ್ದು, ತಾನೊಬ್ಬ ಬೇಜವಾಬ್ದಾರಿ ಮನುಷ್ಯ ಎನ್ನುವುದನ್ನು ಸಾಬೀತು ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಘಟಕದ ಉಪಾಧ್ಯಕ್ಷ ನಲ್ಲೂರುಹಳ್ಳಿ ಟಿ. ನಾಗೇಶ್ ಟೀಕಿಸಿದರು.
ಮಹದೇವಪುರ ಕ್ಷೇತ್ರದ ಹಗದೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
‘ಸಂವಿಧಾನದ ನೀತಿ–ನಿಯಮಗಳನ್ನು ಗಾಳಿಗೆ ತೂರಿ, ಬೇಜಾವಾಬ್ದಾರಿ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ಏನಾದರೂ ಹೇಳಿಕೊಳ್ಳಿ’ ಎಂದರು.
‘ಹೇಳಿಕೆಗಳ ಮೂಲಕ ಸಮಾಜದ ಶಾಂತಿ ಕದಡುತ್ತಿದ್ದಾರೆ. ಇಂತಹ ಸಚಿವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಹೆಗಡೆ ಅವರು ಸಾರ್ವಜನಿಕವಾಗಿ ಕ್ಷಮೆಯನ್ನು ಕೇಳಬೇಕು’ ಎಂದು ಒತ್ತಾಯಿಸಿದರು.