ಬೆಂಗಳೂರು: ಬರಗಾಲದಿಂದ ಸಂಕಷ್ಟಕ್ಕೆ ಸಿಲುಕುವ ಪ್ರತಿ ರೈತ ಕುಟುಂಬದ ಜೀವನ ನಿರ್ವಹಣೆ, ಆರೋಗ್ಯ ವೆಚ್ಚ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ₹1000 ಕೋಟಿ ನಿಧಿ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.
ವಿಧಾನಸೌಧದಲ್ಲಿ ಗುರುವಾರ ಆರಂಭಗೊಂಡ ಆಯವ್ಯಯ ಪೂರ್ವ ಸಿದ್ಧತಾ ಸಭೆಯಲ್ಲಿ ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು ಮಾತನಾಡಿ, ಬರ ನಿರ್ವಹಣೆಗೆ ಶಾಶ್ವತ ಪರಿಹಾರ ನಿಧಿ ಸ್ಥಾಪಿಸಬೇಕು ಎಂದು ಮನವಿ ಮಾಡಿದರು. ಸುಮಾರು ಮೂರು ಗಂಟೆ ಅವಧಿ ನಡೆದ ಸಭೆಯಲ್ಲಿ ರೈತರು ಎದುರಿಸುತ್ತಿರುವ ಸವಾಲುಗಳನ್ನು ಮುಖ್ಯಮಂತ್ರಿ ಮುಂದಿಟ್ಟರು.
ಚುನಾವಣೆಯಲ್ಲಿ ಮತ ಗಳಿಸುವುದರ ಉದ್ದೇಶಕ್ಕಾಗಿ ಬಜೆಟ್ ಮಂಡಿಸುವುದು ಬೇಡ. ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಕೊಡಿಸಬೇಕು. ಡಾ.ಸ್ವಾಮಿನಾಥನ್ ವರದಿ ಶಿಫಾರಸುಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಕೃಷಿ ಬೆಲೆ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕು. ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಬೇಕು. ರೈತ ಉತ್ಪನ್ನಗಳ ಬೆಲೆ ಕುಸಿದಾಗ ಸರ್ಕಾರವೇ ಮಧ್ಯ ಪ್ರವೇಶಿಸಿ, ಲಾಭದಾಯಕ ಬೆಲೆಯಲ್ಲಿ ಖರೀದಿಸಲು ₹ 25,000 ಕೋಟಿ ಆವರ್ತನಿಧಿ ಸ್ಥಾಪಿಸಬೇಕು ಎಂದೂ ಒತ್ತಾಯಿಸಿದರು.