ಹೊಸಕೋಟೆ: ಭಾರತೀಯ ಭೋವಿ ಜನಾಂಗ ಪರಿಷತ್ನ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.
ಭೋವಿ ಜನಾಂಗದವರು ಶ್ರಮಜೀವಿಗಳಾಗಿದ್ದು, ಆರ್ಥಿಕವಾಗಿ ಹಿಂದುಳಿದಿದ್ದಾರೆ. ತಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಿ ಹೋರಾಟ ನಡೆಸಬೇಕು. ಶೈಕ್ಷಣಿಕವಾಗಿ ಮುಂದೆ ಬರಬೇಕು. ಸಮುದಾಯದವರ ಅಭಿವೃದ್ಧಿಗಾಗಿ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ ನೀಡಬೇಕು ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.
ಪರಿಷತ್ತಿನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಚ್.ರವಿ ಮಾಕಳಿ, ‘ಎ.ಜೆ.ಸದಾಶಿವ ಆಯೋಗದ ವರದಿಯು ಭೋವಿ ಜನಾಂಗಕ್ಕೆ ಮಾರಕವಾಗಿದ್ದು, ಅದನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು’ ಎಂದು ಒತ್ತಾಯಿಸಿದರು.
ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೀತಾರಾಮ್, ‘ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ನಲ್ಲಿ ₹2,000 ಕೋಟಿ ಮೀಸಲಿಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ’ ಎಂದರು.
ರಾಜ್ಯ ಮಟ್ಟದ ಭೋವಿ ಜನಾಂಗದ ಸಮಾವೇಶವನ್ನು ಇದೇ 24 ರಂದು ಮೈಸೂರಿನಲ್ಲಿ ನಡೆಸಲಾಗುತ್ತದೆ ಎಂದು ಹೇಳಿದರು