ಹೈದರಾಬಾದ್: ಸಂವಿಧಾನ ತಿದ್ದುಪಡಿ ಮಾಡದ ಹೊರತು 2024ಕ್ಕೂ ಮೊದಲು ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವುದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎಸ್. ಕೃಷ್ಣಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಕೆಲವು ರಾಜ್ಯಗಳಲ್ಲಿ ತೀರಾ ಇತ್ತೀಚೆಗೆ ವಿಧಾನಸಭಾ ಚುನಾವಣೆ ಮುಗಿದಿರುವುದರಿಂದ 2019ರಲ್ಲಿ ಲೋಕಸಭಾ ಚುನಾವಣೆ ಜತೆ ವಿಧಾನಸಭಾ ಚುನಾವಣೆ ನಡೆಸುವುದು ಸಾಧ್ಯವಿಲ್ಲ ಎಂದು ಅವರು ಕಾರಣ ನೀಡಿದ್ದಾರೆ.
2024ರಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಈಗಿನಿಂದಲೇ ಯೋಜನೆ ಮತ್ತು ಸಿದ್ಧತೆ ರೂಪಿಸಬಹುದು ಎಂದು ಅವರು ಸಲಹೆ ಮಾಡಿದ್ದಾರೆ.
ಮಂಗಳವಾರ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕೃಷ್ಣಮೂರ್ತಿ, ಆಡಳಿತ ಮತ್ತು ದುಂದುವೆಚ್ಚಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ಪ್ರತಿ ಐದು ವರ್ಷಗಳಿಗೊಮ್ಮೆ ಏಕಕಾಲಕ್ಕೆ ಚುನಾವಣೆ ನಡೆಸುವ ಉದ್ದೇಶ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.
‘ಆದರೆ, ಆ ಪ್ರಕ್ರಿಯೆ ನಾವು ಅಂದುಕೊಂಡಷ್ಟು ಸುಲಭವಲ್ಲ. ಅದಕ್ಕಾಗಿ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.
ಭಾರತವು ಬ್ರಿಟನ್ನ ವೆಸ್ಟ್ಮಿನಿಸ್ಟರ್ ವ್ಯವಸ್ಥೆ ಬದಲು ಅಮೆರಿಕದ ಅಧಿಕಾರ ವ್ಯವಸ್ಥೆ ಅಳವಡಿಸಿಕೊಂಡಿದ್ದರೆ ಇದು ಸುಲಭವಾಗುತಿತ್ತು ಎಂದು ಕೃಷ್ಣಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.