ಬೆಂಗಳೂರು: ನಕಲಿ ದಾಖಲೆಗಳನ್ನು ನೀಡಿ ಭಾರತೀಯ ಕೈಗಾರಿಕಾ ಹಣಕಾಸು ನಿಗಮದಿಂದ ₹ 190 ಕೋಟಿ ಸಾಲ ಪಡೆದು ವಂಚಿಸಿದ್ದ ಆರೋಪದಲ್ಲಿ ಆಂಧ್ರ ಪ್ರದೇಶ ವಿಧಾನ ಪರಿಷತ್ತಿನ ಮಾಜಿ ಸದಸ್ಯ ವಿ. ನಾರಾಯಣ ರೆಡ್ಡಿಯನ್ನು ಸಿಬಿಐ ಪೊಲೀಸರು ನಗರದಲ್ಲಿ ಸೋಮವಾರ ಬಂಧಿಸಿದ್ದಾರೆ.
ನಿಗಮದ ಬೆಂಗಳೂರು ಶಾಖೆಯಿಂದ ವಿಎನ್ಆರ್ ಇನ್ಫ್ರಾಸ್ಟ್ರಕ್ಚರ್ ಕಂಪೆನಿ ಹೆಸರಿನಲ್ಲಿ ಸಾಲ ಪಡೆದಿದ್ದ ನಾರಾಯಣ ರೆಡ್ಡಿ, ಮರುಪಾವತಿ ಮಾಡಿರಲಿಲ್ಲ. ಈ ಸಂಬಂಧ ನಿಗಮದ ಅಧಿಕಾರಿಗಳು 2017ರ ಮಾರ್ಚ್ನಲ್ಲಿ ಸಿಬಿಐಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರು ಸಿಬಿಐ ಅಧಿಕಾರಿಗಳು, 2017ರ ಮೇನಲ್ಲಿ ನಾರಾಯಣ ರೆಡ್ಡಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.
‘ನಾರಾಯಣ ರೆಡ್ಡಿಯನ್ನು ಭಾನುವಾರ ವಿಚಾರಣೆಗೆ ಕರೆಸಲಾಗಿತ್ತು. ಸೋಮವಾರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ’ ಎಂದು ಸಿಬಿಐ ಮೂಲಗಳು ತಿಳಿಸಿವೆ.
ತೆಲುಗು ದೇಶಂ ಪಕ್ಷದಲ್ಲಿದ್ದ ನಾರಾಯಣ ರೆಡ್ಡಿಯನ್ನು ಸಿಬಿಐ ದಾಳಿ ಬಳಿಕ ಪಕ್ಷದಿಂದ ಉಚ್ಚಾಟಿಸಲಾಗಿತ್ತು.