ನವದೆಹಲಿ: ಹಾದಿಯಾ -ಶಫಿನ್ ಜಹಾನ್ ವಿವಾಹ ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇವರ ಮದುವೆ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ತನಿಖೆ ಎರಡೂ ಪ್ರತ್ಯೇಕ ವಿಷಯಗಳಾಗಿವೆ. ವಿವಾಹದ ವಿಷಯ ಬಿಟ್ಟು ಬೇರೆ ಎಲ್ಲಾ ವಿಷಯಗಳನ್ನು ಎನ್ಐಎ ತನಿಖೆ ನಡೆಸಬಹುದು ಎಂದು ನ್ಯಾಯಾಲಯ ಹೇಳಿದೆ.
ಹಾದಿಯಾ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ವಿವಾಹ ಎಂಬುದು ಕಾನೂನು ವಿರುದ್ಧವಾದದು ಅಲ್ಲ. ಶಫೀನ್ಗೆ ಉಗ್ರ ಚಟುವಟಿಕೆಗಳಲ್ಲಿ ನಂಟು ಇದೆಯೇ ಎಂಬುದನ್ನು ಎನ್ಐಎ ತನಿಖೆ ನಡೆಸುತ್ತಿದ್ದೆ. ತನ್ನ ಇಚ್ಛೆಯಂತೆ ಆತನನ್ನು ಮದುವೆಯಾಗಿದ್ದೇನೆ ಎಂದು ಹಾದಿಯಾ ಹೇಳಿದ್ದಾರೆ. ಹೀಗಾಗಿ ಹೈಕೋರ್ಟ್ ನಲ್ಲಿ ಸಲ್ಲಿಸಿದ ಹೇಬಿಸ್ ಕಾರ್ಪಸ್ ಪರಿಗಣಿಸಿ ವಿವಾಹ ರದ್ದು ಮಾಡಲಾಗುವುದಿಲ್ಲ.
ಆಕೆ ಅಪ್ರಾಪ್ತೆಯಲ್ಲ, ಅವಳು ನ್ಯಾಯಾಲಯದ ಮುಂದೆ ತಾನು ಮದುವೆಯಾಗಿದ್ದೇನೆ ಎಂದು ಹೇಳಿದ್ದಾಳೆ. ಹೀಗಿರುವಾಗ ನ್ಯಾಯಾಲಯಕ್ಕೆ ಏನು ಮಾಡಲು ಸಾಧ್ಯ?. ಆಕೆಯ ವೈವಾಹಿಕ ಸಂಬಂಧದ ಬಗ್ಗೆ ನಾವು ಪ್ರಶ್ನಿಸುವಂತಿಲ್ಲ. ಅದನ್ನು ಪ್ರಶ್ನಿಸುವ ಹಕ್ಕು ಇರುವುದು ಆಕೆಗೆ ಮತ್ತು ಆಕೆಯ ಗಂಡನಿಗೆ ಮಾತ್ರ ಎಂದು ಹೇಳಿದೆ.
ಈ ಹಿಂದೆ ಹಾದಿಯಾ -ಶಫೀನ್ ವಿವಾಹವನ್ನು ಹೈಕೋರ್ಟ್ ರದ್ದು ಮಾಡಿತ್ತು. ವಿವಾಹ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್, ವಿವಾಹದ ಬಗ್ಗೆ ತನ್ನ ನಿಲುವು ಏನೆಂಬುದನ್ನು ಲಿಖಿತ ರೂಪದಲ್ಲಿ ನೀಡುವಂತೆ ಹಾದಿಯಾ ಅವರಿಗೆ ಹೇಳಿದೆ.
ಫೆಬ್ರುವರಿ 22ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ. ಇದಕ್ಕಿಂತ ಮುನ್ನ ತನಗೆ ಹೇಳಬೇಕಾಗಿರುವ ಎಲ್ಲಾ ವಿಷಯಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಕೋರ್ಟ್ ಹಾದಿಯಾ ಅವರಿಗೆ ಸೂಚಿಸಿದೆ
ಏನಿದು ಪ್ರಕರಣ?
ದೇಶದಾದ್ಯಂತ ಭಾರಿ ಚರ್ಚೆ ಹುಟ್ಟುಹಾಕಿದ ಪ್ರಕರಣವಾಗಿದೆ ಕೇರಳದ ಅಖಿಲಾ (ಹಾದಿಯಾ) ಎಂಬ ಯುವತಿಯ ಅಂತರ್ಧರ್ಮೀಯ ವಿವಾಹ ಪ್ರಕರಣ.
ತಮಿಳುನಾಡಿನ ಸೇಲಂನಲ್ಲಿ ಹೋಮಿಯೋಪಥಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಅಖಿಲಾ, ಶಫಿನ್ ಜಹಾನ್ ಎಂಬ ಮುಸ್ಲಿಂ ಯುವಕನನ್ನು ಕಳೆದ ವರ್ಷದ ಡಿಸೆಂಬರ್ನಲ್ಲಿ ವರಿಸಿದ್ದರು. ನಂತರ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತಮ್ಮ ಹೆಸರನ್ನು ಹಾದಿಯಾ ಎಂದು ಬದಲಾಯಿಸಿಕೊಂಡಿದ್ದರು.
ಈ ಮದುವೆಗೆ ಯುವತಿಯ ಪೋಷಕರ ವಿರೋಧ ಇತ್ತು. ‘ಮಗಳನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ. ಆಕೆಯನ್ನು ಜಿಹಾದಿ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಯತ್ನ ಇದು’ ಎಂದು ಆರೋಪಿಸಿದ್ದ ಆಕೆಯ ತಂದೆ ಅಶೋಕನ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮೇ ತಿಂಗಳಲ್ಲಿ ತೀರ್ಪು ನೀಡಿದ್ದ ನ್ಯಾಯಾಲಯ ಶಫಿನ್–ಹಾದಿಯಾ ಮದುವೆಯನ್ನು ಅಸಿಂಧುಗೊಳಿಸಿತ್ತಲ್ಲದೇ ಯುವತಿಯನ್ನು ಪೋಷಕರಿಗೆ ಒಪ್ಪಿಸಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಶಫಿನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿತ್ತು. ಮದುವೆ ಅಸಿಂಧುಗೊಳಿಸುವ ಹಕ್ಕು ಹೈಕೋರ್ಟ್ಗೆ ಇದೆಯೇ ಎಂದು ಕೇಳಿತ್ತು. ಅಲ್ಲದೇ, ಇದು ಬಲವಂತದ ಮದುವೆ ಹೌದೇ ಅಲ್ಲವೇ ಎಂಬುದನ್ನು ತನಿಖೆ ನಡೆಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಸೂಚಿಸಿತ್ತು.
ನವೆಂಬರ್ 27ರಂದು ಸುಪ್ರೀಂ ಕೋರ್ಟ್ ಮುಂದೆ ಖುದ್ದಾಗಿ ಹಾಜರಾದ ಹಾದಿಯಾ, ಹೋಮಿಯೋಪಥಿ ಶಿಕ್ಷಣವನ್ನು ಮುಂದುವರೆಸುವ ಬಯಕೆ ವ್ಯಕ್ತಪಡಿಸಿದ್ದಲ್ಲದೆ ಪತಿ ಶಫಿನ್ ಜೊತೆಗೆ ಹೋಗುವುದಾಗಿಯೂ ತಿಳಿಸಿದರು.
ಹಾದಿಯಾ ಮನವಿ ಮಾನ್ಯ ಮಾಡಿದ ಸುಪ್ರೀಂ ಕೋರ್ಟ್, ಸೇಲಂನಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಿತು. ಹಾದಿಯಾಗೆ ಅಗತ್ಯ ಭದ್ರತೆ ನೀಡುವಂತೆ ಕೇರಳ ಪೊಲೀಸರಿಗೆ ಸೂಚಿಸಿದೆ. ಕಾಲೇಜಿನ ಡೀನ್ ಅವರನ್ನು ಪಾಲಕರನ್ನಾಗಿಯೂ ನೇಮಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.