ಬೆಂಗಳೂರು: ‘ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಲ್ಲ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಗರ ಪೊಲಿಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಜೊಶೀನ್ ಆ್ಯಂಟನಿ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠ, ‘ಆರೋಪಿಗಳಿಂದ ರಕ್ಷಿಸಿರುವ 16 ಜಾನುವಾರುಗಳನ್ನು ಬಿಡುಗಡೆ ಮಾಡಬಾರದು’ ಎಂದು ನಿರ್ದೇಶಿಸಿದೆ.
ಪ್ರತಿವಾದಿಗಳಾದ ಬೆಂಗಳೂರು ಪೂರ್ವ ವಲಯ ಡಿಸಿಪಿ, ರಾಮನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಲಾಗಿದೆ.
‘ಟ್ಯಾನರಿ ರಸ್ತೆಯಲ್ಲಿರುವ ಬಿಬಿಎಂಪಿ ಕಸಾಯಿಖಾನೆಗೆ ಜ.19ರ ರಾತ್ರಿ 16 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ನಾವು ತಕ್ಷಣ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದೆವು. ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಜಾನುವಾರುಗಳನ್ನು ರಕ್ಷಿಸಿ ಹೆಣ್ಣೂರಿನ ಶ್ರೀಕೃಷ್ಣ ಗೋಶಾಲೆಗೆ ಕಳುಹಿಸಿಕೊಟ್ಟರು. ಆದರೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.