ಬೆಳಗಾವಿ: ‘ಮಹದಾಯಿ ವಿಷಯದಲ್ಲಿ ರಾಜಕೀಯ ಲಾಭ ಪಡೆಯಲು ಪಕ್ಷಗಳು ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ರೈತರಿಗೆ ನ್ಯಾಯ ಒದಗಿಸಬೇಕು ಎನ್ನುವುದು ಕಾಣಿಸುತ್ತಿಲ್ಲ’ ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
ಇಲ್ಲಿನ ಉಷಾ ಕಾಲೊನಿಯ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ನಡೆದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಮಹದಾಯಿ ಹೋರಾಟ ಹಲವು ವರ್ಷಗಳಿಂದಲೂ ನಡೆಯುತ್ತಿದೆ. ಅದಕ್ಕೆ ತಕ್ಕ ಪ್ರತಿಫಲ ಸಿಗದಿರುವುದು ವಿಷಾದದ ಸಂಗತಿ. ಎಲ್ಲ ರಾಜಕೀಯ ಪಕ್ಷಗಳೂ ಪಕ್ಷಾತೀತವಾಗಿ ಚರ್ಚಿಸಿ, ಪರಿಹಾರ ಸೂತ್ರ ಕಂಡುಹಿಡಿಯಬೇಕು’ ಎಂದು ಸಲಹೆ ನೀಡಿದರು.
ಉಜ್ಜಯನಿ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ‘ಮಹದಾಯಿ ಜಲ ವಿವಾದ ಪರಿಹಾರಕ್ಕೆ ಹೋರಾಟ ನಡೆಸುತ್ತಿರುವ ರೈತರೊಂದಿಗೆ ಪಂಚಪೀಠಗಳಿವೆ’ ಎಂದರು.
‘ನೆಲ, ಜಲದ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲದು. ಎಲ್ಲ ಪಕ್ಷದವರೂ ರೈತರ ಹಿತ ಕಾಯಬೇಕು. ನಷ್ಟಕ್ಕೆ ಒಳಗಾಗುವ ಕೈಗಾರಿಕೋದ್ಯಮಿಗಳಿಗೆ ನೀಡುವಂತೆ, ರೈತರಿಗೂ ವಿನಾಯಿತಿ ಕೊಡಬೇಕು’ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.