ಬೆಂಗಳೂರು: ‘ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಕರೆ ನೀಡಿದ್ದ ರಾಜ್ಯ ಬಂದ್ ಅಸಾಂವಿಧಾನಿಕ. ಈ ಸಂಬಂಧ ಬಂದ್ ಕರೆ ಕೊಟ್ಟವರಿಂದ ನಷ್ಟ ವಸೂಲಿಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ರಾಜಾಜಿನಗರದ ಶ್ರದ್ಧಾ ಪೋಷಕರ ಸಂಘದ ಅಧ್ಯಕ್ಷ ಸಿ.ರಾಜಾ ಸಲ್ಲಿಸಿರುವ ಈ ಅರ್ಜಿ ಇನ್ನೂ ವಿಚಾರಣೆ ಬರಬೇಕಿದೆ.
ಅರ್ಜಿಯಲ್ಲಿ ಕೇಂದ್ರ ಗೃಹ ಇಲಾಖೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
‘ಬಂದ್ ಅನ್ನು ಅಸಾಂವಿಧಾನಿಕ, ಅಕ್ರಮ ಹಾಗೂ ಪ್ರಜೆಗಳ ಮೂಲಭೂತ ಹಕ್ಕುಗಳ ಮಧ್ಯಪ್ರವೇಶ ಎಂಬುದಾಗಿ ಘೋಷಿಸಬೇಕು. ಬಂದ್ನಿಂದ ರಾಜ್ಯ ಬೊಕ್ಕಸಕ್ಕೆ ಉಂಟಾಗುವ ನಷ್ಟವನ್ನು ಬಂದ್ಗೆ ಕರೆ ಕೊಟ್ಟವರಿಂದ ವಸೂಲಿ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಮನವಿ.