ಕೊಳ್ಳೇಗಾಲ: ‘ದೇಶದ ಅಭಿವೃದ್ಧಿಗೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದು ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದರು.
ನಗರದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಚುನಾವಣೆಯ ನೀತಿ ನಿಯಮಗಳ ಕುರಿತು ವಿದ್ಯಾರ್ಥಿಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಅನಿವಾರ್ಯವಾಗಿದೆ. ಈ ಬಗ್ಗೆ ತಿಳಿವಳಿಕೆ ನೀಡುವ ಪ್ರಯತ್ನ ನಡೆಯಬೇಕು ಎಂದರು.
ದೇಶದ ಎಲ್ಲ ಪ್ರಜೆಗಳಿಗೂ ಸಂವಿಧಾನವು ಮತದಾನದ ಹಕ್ಕು ನೀಡಿದೆ. ಪ್ರತಿಯೊಬ್ಬರೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನದ ಹಕ್ಕನ್ನು ತಿರಸ್ಕಾರ ಅಥವಾ ನಿರ್ಲಕ್ಷ್ಯ ಮಾಡಬಾರದು ಎಂದು ಹೇಳಿದರು.
ಮತದಾರರ ಗುರುತಿನ ಚೀಟಿ ಅಮೂಲ್ಯವಾದುದು. ಅದನ್ನು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಬಳಸದೆ, ಇನ್ನಿತರ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಹ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪೊಲೀಸ್ ಉಪ ಅಧೀಕ್ಷಕ ಪುಟ್ಟಮಾದಯ್ಯ ಮಾತನಾಡಿ, ಮತದಾನ ನಮ್ಮ ಹಕ್ಕು ಎನ್ನುವ ಸಂದೇಶವನ್ನು ತಮ್ಮ ಮನೆಯವರಿಗೆ ಮತ್ತು ಸುತ್ತಮುತ್ತಲಿನ ಜನರಿಗೆ ನೀಡುವ ಮೂಲಕ ಮತದಾನದ ಬಗ್ಗೆ ಅರಿವು ಮೂಡಿಸುವಲ್ಲಿ ಮಕ್ಕಳು ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕಾಮಾಕ್ಷಮ್ಮ, ಬಿಆರ್ಸಿ ಮಂಜುಳಾ, ಶಿರಸ್ತೇದಾರ್ ಶ್ರೀನಿವಾಸ್, ರಾಜಸ್ವ ನಿರೀಕ್ಷಕ ನಿರಂಜನ್ ಮತ್ತು ತಾಲೂಕು ಕಚೇರಿಯ ಸಿಬ್ಬಂದಿ ಇದ್ದರು.